Friday, September 04, 2026
Menu

ಬರ ನಿರ್ವಹಣೆ: ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಾಲನೆ

ರಾಜ್ಯದಲ್ಲಿ ಮಳೆ ಕೊರತೆ ಕಾಡುತ್ತಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೋಡ ಬಿತ್ತನೆ ಯೋಜನೆಗೆ ಶುಕ್ರವಾರ ಅಧಿಕೃತ ಚಾಲನೆ ನೀಡಿದೆ.

ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಿದರು. ಮೋಡ ಬಿತ್ತನೆಗೆಂದು ಸಿದ್ಧಪಡಿಸಲಾದ ಲಘು ವಿಮಾನಕ್ಕೆ ರಾಷ್ಟ್ರಧ್ವಜ ಮತ್ತು ನಾಡಧ್ವಜ ಪ್ರದರ್ಶಿಸುವ ಮೂಲಕ ಸಚಿವರು ಮೋಡ ಬಿತ್ತನೆಗೆ ಚಾಲನೆಯಿತ್ತರು.

ಈಗ ಮೋಡ ಬಿತ್ತನೆಗೆ ಹವಾಮಾನ ಸೂಕ್ತವಾಗಿಲ್ಲ, ಈಗ ಬಿತ್ತನೆ ಮಾಡಿದರೆ ಪ್ರಯೋಜನ ಆಗದೆ ಇರುವ ಸಾಧ್ಯತೆ ಇದೆ ಎಂದು ತಜ್ಞರ ಎಚ್ಚರಿಕೆ ಮಧ್ಯೆ ರಾಜ್ಯ ಸರ್ಕಾರ ಮೋಡ ಬಿತ್ತನೆ ಆರಂಭಿಸಿದೆ.

ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಜಲ ಸಂಪನ್ಮೂಲ ಸಚಿವರು ಆತಂಕ ವ್ಯಕ್ತಪಡಿಸಿದರು.

ಮುಂಗಾರು ಮಳೆಗಾಲ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮೊದಲು ಅಗತ್ಯ ಪ್ರಮಾಣದ ಕುಡಿಯುವ ನೀರನ್ನು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಮುಂದಿನ ಜೂನ್‌ವರೆಗೂ ತೀವ್ರ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

28.52 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಈ ಯೋಜನೆಯ ಮೂಲಕ ಮಳೆ ಕೊರತೆಯಿರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಿ ಮಳೆಯ ಪ್ರಮಾಣ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್, ಶಾಸಕರಾದ ಎಚ್‌.ಕೆ. ಪಾಟೀಲ್, ಪ್ರಕಾಶ್ ಕೋಳಿವಾಡ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *