ತಿರುವನಂತಪುರದಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಸೇಲಂನ ವಿಶ್ವ (20), ದಿಂಡಿಗಲ್ನ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈನ ಸಂತೋಷ್ (20) ಮತ್ತು ಪ್ರಸನ್ನ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಪತ್ತೆಯಾಗಬೇಕಿದೆ.
ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್ನಲ್ಲಿರುವ ಪಿಎಸ್ಎಂ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಕಾರಣ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್ನ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ತಮಿಳುನಾಡು ನೋಂದಣಿಯ ಕಾರು ನಿಯಂತ್ರಣ ತಪ್ಪಿ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


