ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ ಕಾಂಗ್ರೆಸ್ ಚುನಾವಣೆಯ ಟಿಕೆಟ್ ತಪ್ಪಿಸಲಾಯಿತು. ಬಳಿಕ ಪದವಿ ಓದುವಾಗ ದೇವೇಗೌಡರ ವಿರುದ್ದ ಸ್ಪರ್ಧಿಸುವ ಅವಕಾಶ ದೊರೆಯಿತು. ಆ ಚುನಾವಣೆಯಲ್ಲಿ ಸೋತೆ. ನಂತರ ವಿಧಾನಸಭೆ ಚುನಾವಣೆ ಗೆಲುವು ಕಂಡೆ. ಅಲ್ಲಿಂದ ಇಲ್ಲಿಯವರೆಗೆ ಪ್ರಯಾಣ ಬೆಳೆಸಿದ್ದೇನೆ ಎಂದು ಹೇಳಿದರು.
ಎನ್ ಪಿಎಸ್ ಶಾಲೆಯಲ್ಲಿ ಓದುವಾಗ ತುಂಟ ಎಂಬ ಕಾರಣಕ್ಕೆ ಮುಂದಿನ ತರಗತಿಗಳಿಗೆ ಮುಂದುವರೆಯಲು ಅವಕಾಶ ನೀಡಲಿಲ್ಲ. ಇದಕ್ಕಾಗಿ ಕಾರ್ಮೆಲ್ ಶಾಲೆಗೆ ಸೇರಿಸಲಾಯಿತು. ಅಲ್ಲಿ ಏಳನೇ ತರಗತಿಯಲ್ಲಿ ಚುನಾವಣೆಗೆ ನಿಂತಿದ್ದೆ. ನನ್ನ ಚಿನ್ಹೆ ನಕ್ಷತ್ರ. ನನಗೆ 80 ರಷ್ಟು ಮತಗಳು ಬಂದಿದ್ದರೂ ಶೇ. 20 ರಷ್ಟು ಮತ ಗಳಿಸಿದ್ದ ಸಹಪಾಠಿ ಆರತಿ ಎಂಬುವರನ್ನು ಶಾಲಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಯಿತು. ನನಗೆ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಿ ಕೊಟ್ಟರು ಎಂದರು.
ವಿದ್ಯಾವರ್ಧಕ ಕಾಲೇಜು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಆಗ ದೇಶಪಾಂಡೆ ಎನ್ನುವವರನ್ನು ಚುನಾವಣೆಗೆ ನಿಲ್ಲಿಸಿ ನಾನೇ ಭಾಷಣ ಮಾಡಿ ಗೆಲ್ಲಿಸಿದೆ. ಹೀಗೆ ನಾಯಕತ್ವ ಗುಣಗಳನ್ನು ಹೊಂದಿರುವವರಿಗೆ ಉಂಟಾಗುವ ಅಡಚಣೆಗಳ ಅನೇಕ. ಜನಸೇವಕ ಎಂದು ನನ್ನನ್ನು ಜನ ಗುರುತಿಸಿದರು. ಅದೇ ರೀತಿ ವ್ಯವಸ್ಥೆಯಲ್ಲಿ ಹೊಸ ನಾಯಕತ್ವ ಬೆಳೆಯಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆ ಯುವಕರಿಗೆ ತಿಳಿದಿರಬೇಕು. ಅದಕ್ಕಾಗಿಯೇ ಪ್ರತಿ ಕಾಲೇಜಿನಲ್ಲಿ ಶಿಸ್ತು ಬದ್ಧವಾಗಿ ಚುನಾವಣೆಗಳು ನಡೆಯಬೇಕೆಂದು ಘೋಷಿಸಲಾಗಿದೆ. ಯಾರಲ್ಲಿ ಯಾವ ಕಿಡಿ ಇರುತ್ತದೆಯೋ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ನಾಯಕತ್ವದ ಅವಕಾಶ ದೊರೆಯಬೇಕು. ದಿನೇ ದಿನೇ ಹೊಸ ಬೆಳವಣಿಗೆಗಳು ಯುವಪೀಳಿಗೆಯಲ್ಲಿ ಕಾಣುತ್ತಿದ್ದೇವೆ. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕ ಎಂದು ಹೇಳಿದರು.
ಯುವ ಸಂಸತ್ತು ನಿರ್ಮಾಣ ಮಾಡುವ ಆಶಯದಿಂದ ಶಾಲಾ, ಕಾಲೇಜುಗಳಲ್ಲಿ ಮಾದರಿ ಸಂಸತ್ ನಡೆಸಲಾಗುವುದು. ಇದು ಬಸವಣ್ಣನವರ ಕಾಲದ ಅನುಭವ ಮಂಟಪದ ಚಿಂತನೆಗಳನ್ನು ಒಳಗೊಂಡಿದೆ. ವಿಶ್ವಕ್ಕೆ ಮೊದಲ ಸಂಸತ್ತು ಎಂದು ಖ್ಯಾತಿ ಪಡೆದಿರುವ ಅನುಭವ ಮಂಟಪದ ತಿಳುವಳಿಕೆ ಈ ಮೂಲಕ ನೀಡಲಾಗುವುದು ಎಂದರು.
ರಾಜೀವ್ ಗಾಂಧಿ ಅವರು 74-75 ನೇ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಜನರಿಗೆ ಅಧಿಕಾರ ದೊರಕಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕತ್ವ ಬೆಳೆಸಿದರು. ನಮ್ಮ ಪಕ್ಷ ತ್ಯಾಗ ಮಾಡಿದವರ ಇತಿಹಾಸವನ್ನೇ ಹೊಂದಿದೆ. ನೆಹರೂ ಅವರ ಜೈಲುವಾಸ, ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಪ್ರಾಣತ್ಯಾಗ, ಸೋನಿಯಾ ಗಾಂಧಿ ಅವರ ಅಧಿಕಾರ ತ್ಯಾಗದ ಇತಿಹಾಸವಿದೆ. ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವಲ್ಲ. ಪ್ರಜಾಪ್ರಭುತ್ವ ಎಂದಾಗ ಚುನಾವಣೆ, ಮತದಾನ ಪಂಚಾಯಿತಿಯಿಂದ ಸಂಸತ್ತಿನವರೆಗೆ ನಾಯಕರ ಆಯ್ಕೆ ಮಾತ್ರ ಪ್ರಜಾಪ್ರಭುತ್ವವಲ್ಲ. ಘನತೆ, ಗೌರವ ಮತ್ತು ಬದುಕುವ ಹಕ್ಕನ್ನು ನೀಡುವುದು ನೈಜ ಪ್ರಜಾಪ್ರಭುತ್ವ ಎಂದು ವಿವರಿಸಿದರು.
ಜನರು ಸರ್ಕಾರಕ್ಕೆ ಹೆದರಿದರೆ ಅದು ಸರ್ವಾಧಿಕಾರ. ಸರ್ಕಾರ ಜನರನ್ನು ಗೌರವಿಸಿದಾಗ ಪ್ರಜಾಪ್ರಭುತ್ವವಾಗುತ್ತದೆ. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂದು ಹಿರಿಯರು ನಮಗೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು.
ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎಂದು ಅಂಬೇಡ್ಕರ್ ಹೇಳಿದ್ದಾರೆ. ಭಾರತದ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಬ್ರಿಟಿಷರ ವಿರುದ್ಧ ಹೋರಾಡಿದ್ದು ಕಾಂಗ್ರೆಸ್ ಪಕ್ಷ . ಕಾಂಗ್ರೆಸ್ ನ ಇತಿಹಾಸ ದೇಶದ ಇತಿಹಾಸ. ದೇಶಕ್ಕೆ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ನೀಡಿದ್ದು ಕಾಂಗ್ರೆಸ್ ಪಕ್ಷ. ಸಂವಿಧಾನ, ರಾಷ್ಟ್ರ ಧ್ವಜ, ರಾಷ್ಟ್ರಗೀತೆ ಕಾಂಗ್ರೆಸ್ ಕೊಡುಗೆ. ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಇರುವವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ ಎಂದರು.
ತಿ ತಾಲೂಕಿನಲ್ಲಿ ಮಾರ್ಗದರ್ಶನ ನೀಡಲು ಕಾನೂನು ತಂಡ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದ ಕಾರಣಕ್ಕೆ ಪಕ್ಷದಿಂದ ಲೀಗಲ್ ಬ್ಯಾಂಕ್ ತೆರೆಯಲು ಮುಂದಾಗಿದ್ದೇವೆ. ಎಸ್ ಐಆರ್ ನಿಂದ ಒಂದು ಕೋಟಿ ಜನ ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. 47 ಲಕ್ಷ ಜನರಿಗೆ ಕಾಯಂ ನಿವಾಸ ಪತ್ರ ಹಾಗೂ ಆದಾಯ ಪತ್ರ ಒದಗಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಡಬಲ್ ಇಂಜಿನ್ ಸರ್ಕಾರ ಇದ್ದರೂ ಜನ 2023ರಲ್ಲಿ 136 ಸೀಟುಗಳ ಮೂಲಕ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದರು. ಜನರ ಮನಸ್ಸನ್ನು ಅರಿಯುವುದು ಕಷ್ಟ. ಭಾರತ್ ಜೋಡೋ ಸಂದರ್ಭದಲ್ಲಿ ಜನರ, ನೋವು ಕಷ್ಟಗಳನ್ನು ಅರಿತುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದು ಹೇಳಿದರು.
ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ, ಎಸ್ ಸಿಎಸ್ ಪಿ- ಟಿಎಸ್ ಪಿ ಯೋಜನೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದರು. ಆದರೆ ಕೇಂದ್ರ ಸರ್ಕಾರ ಏಕೆ ಈ ಯೋಜನೆಯನ್ನು ಜಾರಿಗೆ ತರಬಾರದು. ಇದನ್ನು ಜಾರಿಗೆ ತರಲು ಬದ್ಧತೆ ಇರಬೇಕು ಎಂದು ಅಭಿಪ್ರಾಯಪಟ್ಟರು
ದೇಶದ ಜನರ ಮತಹಕ್ಕು ಉಳಿಯಬೇಕು. ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ನಮ್ಮ ಪಕ್ಷದ ಸಿದ್ಧಾಂತದ ಪ್ರಕಾರ ಸರ್ವರಿಗೂ ಸಮಬಾಳು ನೀಡಲಾಗುವುದು. ನಮಗೆ ಮನುಷ್ಯತ್ವ, ಮಾನವೀಯತೆ ಮುಖ್ಯ. ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡಲಾಗಿದೆ. 10-15 ಲಕ್ಷ ನಿವೇಶನಗಳನ್ನು ಬಡವರಿಗೆ ಹಂಚಬೇಕೆಂದು ಕಾರ್ಯಕ್ರಮ ರೂಪಿಸಿಸಲಾಗಿದೆ. ಉಳುವವನಿಗೆ ಭೂಮಿಯಂತಹ ಕಾರ್ಯಕ್ರಮವನ್ನು ಬಿಜೆಪಿ, ಜೆಡಿಎಸ್ ಪಕ್ಷಗಳು ಕೊಟ್ಟಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಮಾತ್ರ ಇಂಥ ಕಾರ್ಯಕ್ರಮ ನೀಡಿದೆ ಎಂದರು.
ಮಲ್ಲಿಕಾರ್ಜುನ ಖರ್ಗೆ 371 ಜೆ ಜಾರಿ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತಂದಿದ್ದಾರೆ. ಆ ಬದ್ಧತೆ ಬೇರೆ ಯಾರಿಗೂ ಇಲ್ಲ. ಸಾಂಸ್ಕೃತಿಕ, ಕ್ರೀಡೆ, ಕಲೆಗಳಿಗೆ ಪ್ರೋತ್ಸಾಹ ನೀಡಲು 10 ಸಾವಿರ ಭಾರತ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಈ ಸರ್ಕಾರ ನಿಮ್ಮೊಂದಿಗಿರುತ್ತದೆ ಎಂದು ಹೇಳಿದರು.


