ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್ಪಿಸಿ ಸೆಕ್ಷನ್ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ. ಈ ಅಧಿಕಾರ ಹೈಕೋರ್ಟ್ಗೆ ಸಂವಿಧಾನದ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುದನ್ನು ಅರ್ಥೈಸಿಕೊಳ್ಳುವಲ್ಲಿ ಹೈಕೋರ್ಟ್ ವಿಫಲವಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಬೇರೆ ಯಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಆರಂಭದಿಂದಲೂ ಕೋರುತ್ತಿರುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಕಳೆದ ತಿಂಗಳು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ವಿಚಾರಣಾ ನ್ಯಾಯಾಲಯದಲ್ಲಿ ವಾದಿಸಿದ್ದರು. ಸ್ನೇಹಮಯಿ ಕೃಷ್ಣ ಈ ಹಿಂದೆ ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ. ಅವರಿಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ , ಪ್ರಕರಣವನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಕಳೆದ ಫೆಬ್ರವರಿ 7 ರಂದು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿತ್ತು.
ಲೋಕಾಯುಕ್ತ ತನಿಖೆಯಲ್ಲಿ ಯಾವುದೇ ಪಕ್ಷಪಾತ ಅಥವಾ ಅಸಮತೋಲಿತ ವಿಧಾನವನ್ನು ದಾಖಲೆಯಲ್ಲಿರುವ ವಿಷಯವು ಸೂಚಿಸುವುದಿಲ್ಲ ಎಂದು ಹೇಳುವ ಮೂಲಕ ಕೃಷ್ಣ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ ಮೂರು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಬಿಐನಿಂದ ಹೆಚ್ಚಿನ ತನಿಖೆ ಅಥವಾ ಮರು ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡಿದ್ದರು. ಮೂರು ವಾರಗಳ ನಂತರ ಸ್ನೇಹಮಯಿ ಕೃಷ್ಣ ದ್ವಿ ಸದಸ್ಯ ಪೀಠದಲ್ಲಿ ಪ್ರಶ್ನೆ ಮಾಡಿದ್ದಾರೆ.