ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯಾ ಆಗಿದ್ದು, ಸರ್ಕಾರದ ಕಾರ್ಯಕ್ರಮಗಳಿಗೂ ಅಡ್ಡಿಯಾಗುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ನಾಗರಾಜ್ ಯಾದವ್ ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಉತ್ತರ ನೀಡಿದ ಅವರು, ಇದೊಂದು ಮಾಫಿಯವಾಗಿದೆ. ಹಿಂದೆ 89 ಗುಂಪು ಮಾಡಿ ಟೆಂಡರ್ ಕರೆದಿದ್ದರು. ಈಗ ಅವರು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲೇರಿ ನಮಗೆ ಯಾವುದೇ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದರು.
ನ್ಯಾಯಾಲಯ ಕೂಡ ಈ ವಿಚಾರವಾಗಿ ನಾವು ಏನು ಮಾಡಬೇಕು ಎಂಬ ತೀರ್ಪು ನೀಡುತ್ತಿಲ್ಲ. ನಾವು ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ 50 ಕಿ.ಮೀ ದೂರದ ಹೊರವಲಯದಲ್ಲಿ ಕಸ ವಿಲೇವಾರಿಗೆ ಪ್ರಯತ್ನ ಮಾಡುತ್ತಿದ್ದೇವೆ. ಬೆಂಗಳೂರಿನ ಕೆಲವು ಶಾಸಕರು ನಮಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಬಯಸುವುದಿಲ್ಲ. ನಾನು ಸತ್ಯಾಂಶವನ್ನೇ ಹೇಳುತ್ತಿದ್ದು, ಎಲ್ಲಾ ಪಕ್ಷದವರು ಇದ್ದಾರೆ ಎಂದು ಅವರು ಹೇಳಿದರು.
ಅಭಿವೃದ್ಧಿಗಾಗಿ ಅವರ ಕ್ಷೇತ್ರಕ್ಕೆ 800 ಕೋಟಿ ನೀಡಬೇಕು ಎಂದು ಕೇಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮಹದೇವಪುರದಲ್ಲಿ ಕಸದ ಗಾಡಿಗಳು ನಿಂತಿವೆ. ಇಲ್ಲಿ ದೊಡ್ಡ ಸಮಸ್ಯೆ ಇದ್ದು, ಸೋಮವಾರ ವಿವರವಾದ ಉತ್ತರ ನೀಡುತ್ತೇನೆ. ಬೆಂಗಳೂರಿನಿಂದ ದೂರ ಈ ಕಸ ವಿಲೇವಾರಿ ಮಾಡಲು ನಾನು ಪ್ರಯತ್ನಿಸುತ್ತಿದ್ದು, ಇದಕ್ಕೆ ಎಲ್ಲಾ ಪಕ್ಷದವರು ಸಹಕಾರ ನೀಡಬೇಕು. ಬೆಂಗಳೂರಿನ ಹೊರವಲಯದಲ್ಲಿ 100 ಎಕರೆ ಜಾಗ ನೀಡಿದರೆ ಅದನ್ನು ಖರೀದಿ ಮಾಡಲು ಸಿದ್ಧವಿದ್ದೇವೆ ಎಂದು ಡಿಕೆ ಶಿವಕುಮಾರ್ ವಿವರಿಸಿದರು.
ಕಸದಿಂದ ವಿದ್ಯುತ್ ಉತ್ಪಾದನೆ ಮಾಡುವ ಪ್ರಯೋಗ ವಿಫಲವಾಗಿದೆ. ಹೀಗಾಗಿ ನಮ್ಮ ಮುಂದೆ ಅರುವ ಆಯ್ಕೆ ಅನಿಲ ಉತ್ಪಾದನೆ ಮಾತ್ರ. ಈ ವಿಚಾರದಲ್ಲಿ ಮೂರ್ನಾಲ್ಕು ಕಡೆಗಳಿಗೆ ಭೇಟಿ ನೀಡಿದ್ದು, ಇಂದೋರಿಗೂ ಭೇಟಿ ನೀಡಬೇಕಿದೆ. ನೈಸ್ ರಸ್ತೆ ಬಳಿ 100 ಎಕರೆ, ದೊಡ್ಡಬಳ್ಳಾಪುರದ ಬಳಿ ಜಮೀನು ಖರೀದಿ ಮಾಡಲಾಗುತ್ತಿದೆ. ಇನ್ನು ನಾನು ಕಸ ವಿಲೇವಾರಿ ವಿಚಾರವಾಗಿ ಟೆಂಡರ್ ಕರೆದಿಲ್ಲ. ಆದರೂ ಮಹಾನಾಯಕರೊಬ್ಬರು ಡಿ.ಕೆ. ಶಿವಕುಮಾರ್ ಈ ಯೋಜನೆಯಲ್ಲಿ 15 ಸಾವಿರ ಕೋಟಿ ಲೂಟಿ ಮಾಡಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.
ಸದಸ್ಯ ಟಿ.ಎನ್ ಜವರಾಯಿ ಗೌಡ ಬೆಂಗಳೂರಿನಲ್ಲಿ ಸ್ವಚ್ಛತಾಕರ್ಮಿಗಳ ಸಂಖ್ಯೆ ಕಡಿಮೆಯಾಗಿದ್ದು, ಪೌರಕಾರ್ಮಿಕರ ನೇಮಕಾತಿ ಅವ್ಯವಹಾರ ಬಗ್ಗೆ ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ವಿಚಾರವಾಗಿ ನಾನು ವಿವರವಾದ ಮಾಹಿತಿ ಪಡೆಯುತ್ತೇನೆ. ಒಟ್ಟು 5 ಸಾವಿರ ಹುದ್ದೆಯನ್ನು ವಿಶೇಷ ಅಭಿಯಾನದ ಮೂಲಕ 2 ವರ್ಷ ದಿನಗೂಲಿ ಕೆಲಸ ಮಾಡಬೇಕು ಎಂದು ನೇಮಕ ಮಾಡಿಕೊಳ್ಳಲಾಗಿದೆ. ಕನ್ನಡಬಾರದವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇಲ್ಲಿ ಈ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು. ಈ ವಿಚಾರವಾಗಿ ನೀವು ನನ್ನ ಗಮನ ಸೆಳೆದಿದ್ದು ಸೋಮವಾರ ಅಥವಾ ಮಂಗಳವಾರ ಇನ್ನಷ್ಟು ವಿವರವಾದ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.
ಸದಸ್ಯ ಡಿ.ಟಿ ಶ್ರೀನಿವಾಸ್ ನಗರದಲ್ಲಿ ಸ್ಕೈವಾಕರ್ ಗಳ ನಿರ್ವಹಣೆಯಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಬೆಂಗಳೂರಿನಲ್ಲಿ ಎಷ್ಟು ಸ್ಕೈವಾಕ್ ಗಳಿವೆ, ಯಾವ ಮಟ್ಟದಲ್ಲಿ, ಮುಂದೆ ಈ ವಿಚಾರವಾಗಿ ನಮ್ಮ ನೀತಿಗಳೇನು ಎಂಬುದನ್ನು ಉತ್ತರದಲ್ಲಿ ನೀಡಬೇಕಿದ್ದು, ಈ ಪ್ರಶ್ನೆಗೆ ಸೋಮವಾರ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು.
ಯಾರ ಬದುಕನ್ನು ಹೀಯಾಳಿಸಬಾರದು.
ಶೂನ್ಯ ವೇಳೆ ನಂತರ ಅರ್ಧತಾಸು ಕಾಲಾವಧಿ ಚರ್ಚೆ ವೇಳೆ ಗ್ಯಾರಂಟಿ ಅನುಷ್ಠಾನ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಸದಸ್ಯರಾದ ಶರವಣ ಅವರು ಚರ್ಚೆ ಆರಂಭಿಸಿದರು. ನಂತರ ಕಾಂಗ್ರೆಸ್ ಸದಸ್ಯರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಶರವಣ ಅವರು ಸರ್ಕಾರದಿಂದ ಯಾವ ನಿಯಮ ಉಲ್ಲಂಘನೆಯಾಗಿದೆ ಎಂದು ನೇರವಾಗಿ ಉಲ್ಲೇಖಿಸಿ ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಅವರ ಪ್ರಶ್ನೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶರವಣ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಹಳ ಬುದ್ಧಿವಂತರು. ಅವರು ಹಾಲು ಕುಡಿದಿರುವಷ್ಟು, ನಾನು ನೀರು ಕುಡಿದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು. ಇದರಿಂದ ಕೆಂಡವಾದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶರವಣ ಅವರ ಮಧ್ಯೆ ವಾಗ್ವಾದ ನಡೆಯಿತು.
ಈ ವೇಳೆ ಮಾತನಾಡಿದ ಶಿವಕುಮಾರ್ ಅವರು “ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಸದಸ್ಯರು, ಶರವಣ ಅವರೂ ಹಿರಿಯ ಸದಸ್ಯರು. ಆದರೆ ನೀರು ಹಾಗೂ ಹಾಲಿನ ಹೋಲಿಕೆ ಮಾಡುವುದು ಸರಿಯಲ್ಲ. ಹಾಲು ಕುಡಿಯಬಾರದಾ? ಕೆಲವರು ಹಾಲು ಕುಡಿದೇ ಬೆಳೆಯುತ್ತಾರೆ. ಹಾಗೆಂದು ಅವರ ಜೀವನವನ್ನು ಹೀಯಾಳಿಸಬಾರದು. ಉದಾಹರಣೆಗೆ ನಾನು ದಿನಾ ಬೆಳಗ್ಗೆ ವಿಸ್ಕಿಯನ್ನೇ ಕುಡಿಯುತ್ತೇನೆ ಎಂದು ಭಾವಿಸಿ. ಹಾಗೆಂದು ಚುಚ್ಚು ಮಾತುಗಳನ್ನು ಆಡಬಾರದು. ಪ್ರಿಯಾಂಕ್ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಅನೇಕ ತ್ಯಾಗ ಬಲಿದಾನದೊಂದಿಗೆ ಬೆಳೆದು ಬಂದಿದ್ದಾರೆ. ಅವರ ಕುಟುಂಬ ಹೋರಾಟ ಮಾಡಿಕೊಂಡೇ ಈ ಮಟ್ಟಕ್ಕೆ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸಭೆಯಲ್ಲಿ 50 ವರ್ಷಗಳ ಕಾಲ ಪ್ರತಿನಿಧಿಸಿದ್ದು, ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ಇಂದು ರಾಷ್ಟ್ರಮಟ್ಟದವರೆಗೂ ಬೆಳೆದಿದ್ದಾರೆ. ಅವರು ನಮ್ಮ ಪಕ್ಷ ಹಾಗೂ ಸರ್ಕಾರದ ಧ್ವನಿ. ಪ್ರಿಯಾಂಕ್ ಖರ್ಗೆ ಅವರು ತಪ್ಪು ಮಾಡಿದ್ದರೆ ಅದನ್ನು ನೇರವಾಗಿ ಟೀಕೆ ಮಾಡಲಿ. ನಾವು ಶರವಣ ಅವರಿಗೆ ನೀವು ಚಿನ್ನ ಮಾರುತ್ತಿದ್ದೀರಿ, ನೀವು ಚಿನ್ನಕ್ಕೆ ಬೆಳ್ಳಿ, ತಾಮ್ರ, ಕಬ್ಬಿಣ ಹಾಕುತ್ತೀಯಾ ಎಂದು ಹೇಳಲು ಸಾಧ್ಯವಿಲ್ಲ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಕ್ಕೆ ನಿಂತರು.