ರಾಜ್ಯಕ್ಕೆ 15ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರತಿಪಕ್ಷಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 72 ಸಾವಿರ ಕೊಟ್ಟರೆ ರಾಜ್ಯ ಸರ್ಕಾರ 42 ಸಾವಿರ ಕೊಡುತ್ತದೆ. ಕರ್ನಾಟಕ 2025-26 ನೇ ಸಾಲಿಗೆ 5 ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತಿದ್ದೇವೆ. ನಮಗೆ ಅಂದಾಜು 51 ಸಾವಿರ ಕೋಟಿ ವಾಪಸ್ಸು ಬರಬೇಕಾಗುತ್ತದೆ. ಇದನ್ನು ಪ್ರಶ್ನಿಸಬಾರದು ಹಾಗೆಂದು ಕೇಳಿದರೆ ಕೇಂದ್ರ ಸರ್ಕಾರ ವಿರುದ್ಧ ಮಾತನಾಡಬಾರದೆಂದು ಅಶೋಕ್ ಪ್ರಶ್ನಿಸುತ್ತಾರೆ ಎಂದರು.
ರಾಜ್ಯದಲ್ಲಿ ಆರ್ಥಿಕವಾಗಿ ಹೆಚ್ಚು ಅನುದಾನ ನೀಡಲು ಸಾಧ್ಯವಾಗದೆ ಇರುವುದು ಬಿಜೆಪಿ ಸರ್ಕಾರದಿಂದ. ಬಿಜೆಪಿ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಂಡಿರಿ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್ಲುಗಳು ನಿಮ್ಮ ಬಳುವಳಿ. ನಿಮ್ಮಿಂದ ನಾವು ಕಷ್ಟ ಪಡುವ ಸಂದರ್ಭ ಒದಗಿದೆ ಎಂದು ಅವರು ಲೆಕ್ಕ , ದಾಖಲೆ ಮಂಡಿಸಿದರು.
ನೀವು ಕೇಂದ್ರದಿಂದಲೂ ಅನುದಾನ ತಂದಿಲ್ಲ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗದ ಅಧ್ಯಕ್ಷರು 11495 ಕೋಟಿ ಶಿಫಾರಸ್ಸು ಮಾಡಿದರು. ನೀವು ಈ ಬಗ್ಗೆ ಕೇಳಲಿಲ್ಲ ಎಂದು ಅವರು ನುಡಿದರು.