Menu

ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ  ಡಿಕೆ ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಸರಣಿ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ, “ಕಾಂಗ್ರೆಸ್ ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತೂ ಇಲ್ಲ. ಯಾರೋ ಇದರ ಬಗ್ಗೆ ಪಿಐಎಲ್ ಹಾಕಿದ್ದಾರೆ. ಇದು ಬಹಳ ವರ್ಷದಿಂದ ನಡೆದಿದೆ. ಭೂಒತ್ತುವರಿ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾಯಲಯವು ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದರ ಬಗ್ಗೆ ನಾವು ಮಾಧ್ಯಮದಲ್ಲಿ ಓದಿದ್ದೇವೆ. ನ್ಯಾಯಾಲಯ ಕ್ರಮ ತೆಗೆದುಕೊಳ್ಳಲು ಗಡವು ನೀಡಿದ ಕಾರಣಕ್ಕೆ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ” ಎಂದರು.

“ವಾಟ್ಸಪ್ ಅಲ್ಲಿ ಬಂದ ಸುದ್ದಿ ನೋಡಿದೆ. ಅಧಿಕಾರಿಗಳು ನೋಟಿಸ್ ನೀಡದೆ ಅಳತೆ ಮಾಡಲು ಸಾಧ್ಯವೇ? ಮೊದಲಿನಿಂದಲೂ ಅಳತೆ ಮಾಡಲಾಗಿತ್ತು. ಅವರ ಸಿಬ್ಬಂದಿ ಹೆಚ್ಚುವರಿ ಭೂಮಿಯಿದ್ದರೆ ವಾಪಸ್ ತೆಗೆದುಕೊಳ್ಳಿ ಎಂದು ಏಕೆ ಪತ್ರ ಬರೆದಿದ್ದಾರೆ? ಎಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ಅವರು ನಮ್ಮ ಮೇಲೆ ಈ ಹಿಂದೆ ಏನು ಮಾತನಾಡಿದ್ದಾರೆ ಎಂಬುದನ್ನು ಈಗ ಒಮ್ಮೆ ನೆನಪು ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ನಮ್ಮದನ್ನೂ ಹೊರಗೆ ತೆಗೆದಿಡಲಿ: “ನಮ್ಮದೂ ಬೇಕಾದಷ್ಟು ದಾಖಲೆ ತೆಗೆದಿಟ್ಟುಕೊಂಡಿದ್ದಾರಂತೆ.‌ ನಾವು ಏನಾದರೂ ಒತ್ತುವರಿ ಮಾಡಿಕೊಂಡಿದ್ದರೆ ತೆಗೆದಿಡಲಿ. ಎಲ್ಲವೂ ನನ್ನ ಬಳಿ ಇದೆ, ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದ್ದ ನೆನಪು. ಮಧ್ಯರಾತ್ರಿ ಒತ್ತಿಸಿಕೊಂಡಿದ್ದಾರೆ, ಬರೆಸಿಕೊಂಡಿದ್ದಾರೆ ಎಂದು ನಮ್ಮ ವಿರುದ್ಧ ಆರೋಪ ಮಾಡಿದ್ದರು. ಕಾಸು ಕೊಟ್ಟು ಬರೆಸಿಕೊಂಡಿದ್ದೇವೆ. ಪುಗಸಟ್ಟೆ ಯಾರೂ ಬರೆದು ಕೊಡುವುದಿಲ್ಲ. ನಾನು ಒತ್ತುವರಿಗೆ ಯಾರಿಗಾದರೂ ಭಯಪಡಿಸಿ ದ್ದರೆ ಅವರಿಂದ ದೂರು ದಾಖಲಿಸಲಿ ಅಥವಾ ಇವರೇ ದೂರು ನೀಡಲಿ. ಇವರು ಮಾತ್ರ ಶುದ್ಧ, ನಾವು ಅಶುದ್ಧವೇ? ನಾವು ಯಾವುದೇ ದ್ವೇಷದ ರಾಜಕಾರಣಕ್ಕೆ ಹೋಗಿಲ್ಲ. ನನ್ನ ಮೇಲೂ ಬೇಕಾದಷ್ಟು ಪಿಐಎಲ್ ಹಾಕಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಮೇಲೂ ಈ ಹಿಂದೆ ಅವರು ಬೇಕಾದಷ್ಟು ಆರೋಪ ಮಾಡಿಲ್ಲವೇ? ಗ್ರಾನೈಟ್ ಅದು, ಇದು ಕದ್ದಿದ್ದೀರಿ ಎಂದು ಹೇಳಿರಲಿಲ್ಲವೇ? ನನ್ನ ಹೆಂಡತಿ, ತಂಗಿ, ತಮ್ಮನ ಮೇಲೆ ತನಿಖೆ ನಡೆದಿರಲಿಲ್ಲವೇ? ಬಳ್ಳಾರಿಗೆ ಹೋಗಿ ಕದ್ದುಕೊಂಡು ಬಂದಿದ್ದೀರಿ ಎಂದು ಪ್ರಕರಣ ದಾಖಲಿಸಿರಲಿಲ್ಲವೇ? ಇವರ ಅಣ್ಣ ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಬೇಕಾದಂತೆ ಅರ್ಜಿ ಬರೆದುಕೊಟ್ಟಿರಲಿಲ್ಲವೇ? ನಮಗೆಲ್ಲಾ ಇದು ತಿಳಿದಿಲ್ಲವೇ? ಸುಮ್ಮನೆ ಕಾಂಗ್ರೆಸ್, ಕಾಂಗ್ರೆಸ್ ಎನ್ನುತ್ತಾರೆ.‌ ಯಾವ ಕಾಂಗ್ರೆಸ್ಸಿಗರು ಇವರ ವಿಚಾರಕ್ಕೆ ಹೋಗಿಲ್ಲ. ಇವರ ಜಮೀನು ಇದ್ದರೆ ಉಳಿದುಕೊಳ್ಳುತ್ತದೆ. ಇಲ್ಲದಿದ್ದರೇ ಬಿಟ್ಟುಕೊಡಬೇಕಾಗುತ್ತದೆ” ಎಂದು  ಪ್ರತಿಕ್ರಿಯಿಸಿದರು.

“ಗ್ರೇಟರ್ ಬೆಂಗಳೂರಿನಿಂದ ಲೂಟಿ ಮಾಡಲಾಗುತ್ತಿದೆ, ನಾವು ಯಾವುದೇ ಲೂಟಿ ಮಾಡುತ್ತಿಲ್ಲ” ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ರಾಜಕೀಯವಾಗಿ ಜೀವ ಕೊಟ್ಟ ರಾಮನಗರ ಜಿಲ್ಲೆಗೆ ಹೊಸ ರೂಪ ನೀಡಲು ನಾವು ಈ ನಿರ್ಧಾರ ಮಾಡಿದ್ದೇವೆ. ಆದರೆ ಅವರು ರಾಜಕೀಯ ಆರೋಪ ಮಾಡಬೇಕು ಎಂದು ಮಾಡುತ್ತಿದ್ದಾರೆ. ಅವರು ನನ್ನನ್ನು ಬೈಯದೇ ಇನ್ಯಾರನ್ನು ಬೈಯುತ್ತಾರೆ” ಎಂದರು.

“ಕುಮಾರಸ್ವಾಮಿ ಅವರೇ ಹೆಚ್ಚು ಅನುಕೂಲ ಪಡೆದವರು, ಆದರೂ ನಿಮ್ಮ ಮೇಲೆ ಏಕೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ನೀವೇ ಅನುಕೂಲ ಮಾಡಿಕೊಟ್ಟಿದ್ದೀರಿ ಅಲ್ಲವೇ” ಎಂದು ಮರು ಪ್ರಶ್ನಿಸಿದಾಗ, ” “ಅವರ ಜಮೀನು ಪಕ್ಕದಲ್ಲಿ ಇದೆ ಎನ್ನುವ ಕಾರಣಕ್ಕೆ ನಾವು ದ್ವೇಷ ರಾಜಕಾರಣ ಮಾಡಲು ಆಗುತ್ತದೆಯೇ? ಅವರ ತಂದೆ 5- 6 ಸಾವಿರಕ್ಕೆ 1984-85 ರಲ್ಲಿ ಅವರ ಅತ್ತೆ, ನಾದಿನಿ ಹೆಸರಿಗೆ ಜಮೀನು ತೆಗೆದುಕೊಂಡಿದ್ದರು. ಅದು ಕುಮಾರಸ್ವಾಮಿ ಅವರಿಗೆ ಉಡುಗೊರೆಯಾಗಿ ಬಂದಿದೆ. 7-8 ಕೋಟಿಗೆ ಹೋಗುತ್ತದೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದಾದರೆ 10 ಕೋಟಿಯಾಗುತ್ತದೆ. ನಾವು 2-3 ಸಾವಿರಕ್ಕೆ ಒಂದು ಕಾಲದಲ್ಲಿ ಜಮೀನು ತೆಗೆದುಕೊಂಡಿದ್ದೆವು, ಅವುಗಳ ಬೆಲೆ ಸಹ ಹೆಚ್ಚಾಗಿದೆ ಏನು ಮಾಡಲು ಆಗುತ್ತದೆ” ಎಂದು ಮಾರ್ಮಿಕವಾಗಿ ನುಡಿದರು.

“ಏನಾದರೂ ಒಳ್ಳೆ ಕೆಲಸಗಳು ಮಾಡುವಾಗ ಅಡಚಣೆಗಳು ಉಂಟಾಗುತ್ತವೆ. ಅದಕ್ಕೆ ಕಲ್ಲೆಸೆಯುವವರು, ಅಡಚಣೆ ಉಂಟು ಮಾಡುವವರು ಇರುತ್ತಾರೆ. ಈ ಜಾಗವನ್ನು ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ರಾಮನಗರ, ಸಾತನೂರು, ಸೋಲೂರು, ತ್ಯಾಮಗೊಂಡ್ಲು ಸೇರಿದಂತೆ ಒಟ್ಟು ಐದು ಕಡೆ ನೋಟಿಫಿಕೇಶನ್ ಮಾಡಿದ್ದರು. ನಾನು ಡಿನೋಟಿಫಿಕೇಷನ್ ಗೆ ಹೋಗಿರಲಿಲ್ಲ. ಹೊಸ ಮಾದರಿಯ ಅಂತರರಾಷ್ಟ್ರೀಯ ಮಟ್ಟದ ನಗರ ಮಾಡಬೇಕು ಎನ್ನುವ ಆಲೋಚನೆಯನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಕ್ಯಾಬಿನೆಟ್ ಮುಂದೆ ಇಟ್ಟು ಒಪ್ಪಿಗೆ ತೆಗೆದುಕೊಳ್ಳಲಾಗಿದೆ. ಇದು ಅಂತರರಾಷ್ಟ್ರೀಯ ನಗರವಾಗಿ ಬೆಳೆಯುತ್ತದೆ. ಈಗ ಇರುವ ಬೆಂಗಳೂರಿಗಿಂತ ಹೊಸ ಬೆಂಗಳೂರನ್ನು ಸೃಷ್ಟಿ ಮಾಡಲು ಅನುಕೂಲವಾಗುತ್ತದೆ. ಕುಮಾರಸ್ವಾಮಿಗೆ ಹೆಚ್ಚು ಅನುಕೂಲವಾಗಲಿದೆ. ಅವರದ್ದೇ ಹೆಚ್ಚು ಜಮೀನುಗಳು ಅಕ್ಕಪಕ್ಕವಿರುವುದು. ಅತ್ಯಂತ ಹೆಚ್ಚು ಅನುಕೂಲ ಪಡೆಯುವವರು ಅವರ ಕುಟುಂಬದವರೇ” ಎಂದು ತಿಳಿಸಿದರು.

ಒಳಮೀಸಲಾತಿ ಜಾರಿಗೆ ನಮ್ಮ ಪಕ್ಷ ಬದ್ಧ: ಒಳ ಮೀಸಲಾತಿ ವಿಚಾರವಾಗಿ ನಾಯಕರ ಸಭೆ ಬಗ್ಗೆ ಪ್ರಶ್ನಿಸಿದಾಗ “ಒಳಮೀಸಲಾತಿ ವಿಚಾರವಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ನಾವು ಬದ್ಧವಾಗಿದ್ದೇವೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ, ತಮ್ಮಲ್ಲಿಯೇ ಮಾತನಾಡಿ ರಾಜಿ ಮಾಡಿಕೊಳ್ಳಿ ಎಂದು ಹೇಳಲಾಗಿತ್ತು. ಆದ ಕಾರಣ ಸಭೆ ಮಾಡಿದ್ದಾರೆ. ಬೋವಿಗಳು, ಲಂಬಾಣಿ, ಕೊರಮ, ಕೊರಚ, ಎಡಗೈ, ಬಲಗೈಗೆ ಸೇರಿದ ಸಮುದಾಯಗಳಿವೆ ಅವರೆಲ್ಲಾ ಸೇರಿ ಒಂದು ತೀರ್ಮಾನಕ್ಕೆ ಬಂದರೆ ಸಂತೋಷ” ಎಂದರು.

ಅಲ್ಪಸಂಖ್ಯಾತರ ಗುತ್ತಿಗೆ ಮೀಸಲು ವಿಚಾರವಾಗಿ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ಕುವೆಂಪು ಅವರ ಹಾಡನ್ನು ನಾವು ನಾಡಗೀತೆ ಮಾಡಿಕೊಂಡಿದ್ದೇವೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಎಲ್ಲರೂ ಮೇಲಕ್ಕೆ ಬರಬೇಕು. ಪರಿಶಿಷ್ಟ ಜಾತಿಯವರಿಗು ಕೂಡ ಗುತ್ತಿಗೆ ಮೀಸಲಾತಿ ನೀಡಿದ್ದೇವೆ. ಇದೇ ರೀತಿ ಇವರಿಗೂ ಕೊಟ್ಟಿದ್ದೇವೆ. ಸಣ್ಣಪುಟ್ಟ ಕೆಲಸ ಮಾಡಿಕೊಳ್ಳುತ್ತಾರೆ” ಎಂದರು.

ಬಡತನವೇ ಒಂದು ಧರ್ಮ: ಸಿದ್ದರಾಮಯ್ಯ, ಶಿವಕುಮಾರ್ ಒಂದು ಧರ್ಮದ ಓಲೈಕೆ ಮಾಡುತ್ತಿದ್ದಾರೆ ಹಿಂದುಳಿದವರು ಕಾಂಗ್ರೆಸ್ ಗಮನದಲ್ಲಿ ಇಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೇಳಿದವರು ಯಾರು? ಪರಿಶಿಷ್ಟ ಜಾತಿಯವರು ಒಂದು ಧರ್ಮವೇ? ಬಡತನವೇ ಒಂದು ಧರ್ಮ. 2ಎ ವರ್ಗಕ್ಕೆ, ಪರಿಶಿಷ್ಟರಿಗೆ ಗುತ್ತಿಗೆ ಮೀಸಲಾತಿ ನೀಡಿಲ್ಲವೇ? ಹಾಗಾದರೆ ಇವರು ಎಲ್ಲರಿಗೂ ವಿರೋಧ ಮಾಡುತ್ತಿದ್ದಾರೆ. ಹಾಗಾದರೆ ಈ ವರ್ಗಗಳ ಜನರನ್ನು ಮೇಲಕ್ಕೆ ಎತ್ತುವುದು ಹೇಗೆ? ಹಾಗಾದರೆ ಪರಿಶಿಷ್ಟ, ಅಲ್ಪಸಂಖ್ಯಾತ, ಹಿಂದುಳಿದ ಇಲಾಖೆಗಳನ್ನು ಏಕೆ ಇಟ್ಟುಕೊಂಡಿದ್ದೇವೆ?. ಅವರಿಗೆ ಹಿಂದು ಮಾತ್ರ ಮುಂದು. ನಮಗೆ ಆ ರೀತಿಯ ಮನೋಭಾವವಿಲ್ಲ. ಹಿಂದೂ, ಕ್ರೈಸ್ತ, ಮುಸಲ್ಮಾನ, ಒಕ್ಕಲಿಗ, ಲಿಂಗಾಯತ, ಮಹಿಳೆಯರು ಎಲ್ಲರೂ ಮುಂದು,‌ ನಾವೆಲ್ಲ ಒಂದು ಎಂಬುದು ನಮ್ಮ ಭಾವನೆ” ಎಂದರು.

Related Posts

Leave a Reply

Your email address will not be published. Required fields are marked *