Wednesday, September 09, 2026
Menu

ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ: ಡಿಕೆ ಶಿವಕುಮಾರ್‌

ಆನೇಕಲ್, ಸರ್ಜಾಪುರಕ್ಕೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ತಯಾರಾಗುತ್ತಿದೆ. ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಆನೇಕಲ್ ತಾಲೂಕು ಪಂಚಾಯಿತಿ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ವತಿಯಿಂದ ಎಚ್.ಹೊಸಹಳ್ಳಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.

ನೇರವಾಗಿ ಮಾತನಾಡುವವರಿಗೆ ಶತ್ರುಗಳು ಜಾಸ್ತಿ, ಸುಳ್ಳು ಹೇಳುವವರಿಗೆ ಸ್ನೇಹಿತರು ಜಾಸ್ತಿ ಇರುತ್ತಾರೆ. ಬಿಜೆಪಿ ಭಾವನೆ ಮೇಲೆ ರಾಜಕಾರಣ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದೆ. ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹4 ಹೆಚ್ಚಳ ಮಾಡಿದರೆ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ದಿನನಿತ್ಯದ ವಸ್ತುಗಳ ಮೇಲೆ ಕೇಂದ್ರ ಸರ್ಕಾರ ಜಿಎಸ್‌ಟಿ ವಿಧಿಸಿ ಮಧ್ಯಮ ವರ್ಗದವರ ಬದುಕನ್ನು ಹಾಳುಗೆಡವಿದರೂ ಸುಮ್ಮನಿರುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಕಾವೇರಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. 78 ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಟೀಕಿಸುವವರಿಗೆ ಅಭಿವೃದ್ಧಿ ಮೂಲಕ ಉತ್ತರ ನೀಡಲಾಗುತ್ತಿದೆ ಎಂದರು.

 

Related Posts

Leave a Reply

Your email address will not be published. Required fields are marked *