ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಪಡೆಯು ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಕೊನೆಗೂ ಭಾರತಕ್ಕೆ ಶರಣಾಗಿದೆ. ಪಾಕಿಸ್ತಾನ ಶಾಂತಿ ಸ್ಥಾಪನೆ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್ ಶರೀಫ್ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ.
ಭಾರತದೊಂದಿಗಿನ ಸೇನಾಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.
ಶಾಂತಿಗಾಗಿ ನಾವು ಭಾರತದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡಂತೆ ಶಾಂತಿಗಾಗಿ ಷರತ್ತುಗಳು ಇರುವುದಾಗಿ ಶೆಹಬಾಜ್ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗ ಎಂದು ಭಾರತ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದೆ.
ಶೆಹಬಾಜ್ ಅವರೊಂದಿಗೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ವಾಯುನೆಲೆಗೆ ಭೇಟಿ ನುಡಿದಿದ್ದರು.
ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ 26 ಪ್ರವಾಸಿಗರು ಬಲಿಯಾದ ಬಳಿಕ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಪ್ರತ್ಯುತ್ತರವಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನಿ ಮಿಲಿಟರಿ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿವೆ.