ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶ ಪ್ರಕಟವಾಗಿದೆ. ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.
ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ರ್ಯಾಂಕ್ ಗಳಿಸಿ ದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ರ್ಯಾಂಕ್ , ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ (99%) ಗಳಿಸಿದ್ದಾರೆ.
ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ನರ್ಸಿಂಗ್ ವಿಭಾಗದಲ್ಲಿ ಯಲಹಂಕ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ನ ನ್ಯಾಷನಲ್ ಪಬ್ಲಿಕ್ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಳಚ್ಚಿಲ್ನ ಎಕ್ಸ್ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ಸ್ಥಾನ ಗಳಿಸಿದ್ದಾರೆ.
ಪಶು ವೈದ್ಯಕೀಯ ವಿಭಾಗದಲ್ಲಿ ಯಲಹಂಕದ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ, ಹೆಚ್ಎಸ್ಆರ್ ಲೇಔಟ್ನ ಆತ್ರೇಯ ನ್ಯಾಷನಲ್ ಪಬ್ಲಿಕ್ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಹಾಗೂ ಮಂಗಳೂರಿನ ವಳಚ್ಚಿಲ್ನ ಎಕ್ಸ್ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ಸ್ಥಾನ ಗಳಿಸಿದ್ದಾರೆ.
ಏ.16 ಮತ್ತು 17ರಂದು ಈ ಬಾರಿಯ ಸಿಇಟಿ ಪರೀಕ್ಷೆಗಳನ್ನು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 3.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. 1,958 ಅಭ್ಯರ್ಥಿಗಳು ಹಾಜರಾಗಿದ್ದರು.
ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶವನ್ನು https://cetonline.Karnataka.gov.in/ugcetrank2025/checkresult.aspx ಹಾಗೂ https://karresults.nic.in ನಲ್ಲಿ ವೀಕ್ಷಿಸಬಹುದು.