ಬೆಂಗಳೂರು, ಆ. 20: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.