ಮಗು ಬೇಡವೆಂದು ಎಂಟು ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ವ್ಯಕ್ತಿಯನ್ನು ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬಂಧಿಸಲಾಗಿದೆ.
ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿರುವುದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಆರೋಪಿ ಸ್ಥಳದಿಂದ ತೆರಳಿದ್ದ, ಕೆಲವು ಗಂಟೆಗಳ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.
35 ವರ್ಷದ ಹಸೀನಾಳ ಕುತ್ತಿಗೆ ಹಬಿಗಿದು ಸಾಯಸಲು ಗಂಡ ಮಹಮ್ಮದ್ ಫಿರ್ ಪ್ರಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಫಿರ್ ಮತ್ತು ಹಸೀನಾ 15 ವರ್ಷಗಳಿಂದ ಪರಸ್ಪರ ಪರಿಚಯ ಹೊಂದಿದ್ದು, ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಫಿರ್ಗೆ ಮೊದಲೇ ಮದುವೆಯಾಗಿತ್ತು. ಮಗು ಬೇಡವೆಂಬ ಕಾರಣಕ್ಕೆ ಈ ಹಿಂದೆ ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಆರೋಪವಿದೆ. ಮೂರನೇ ಬಾರಿ ಹಸೀನಾ ಗರ್ಭಿಣಿಯಾಗಿದ್ದರಿಂದ ಆಕೆಯ ಮೇಲೆ ಆರೋಪಿ ಹಲವು ಬಾರಿ ಹಲ್ಲೆ ಮಾಡಿದ್ದ. ಹಸೀನಾ ಮಲಗಿದ್ದ ವೇಳೆ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಆಕೆ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದ.
ಮೂರರಿಂದ ನಾಲ್ಕು ಗಂಟೆ ಬಳಿಕ ಹಸೀನಾಗೆ ಪ್ರಜ್ಞೆ ಬಂದಿದೆ. ವಿಷಯ ತಿಳಿದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರೇಯಸಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಯತ್ನ
ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದು, ಬೇರೆಯವನನ್ನು ಮದುವೆಯಾಗಲು ಒಪ್ಪಿದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಯುವಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೋಲಾರ ನರಸಾಪುರದ ಯುವಕ ನವಾಜ್ ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್ಗೆ ಚಾಕುವಿನಿಂದ ಇರಿದಿದ್ದಾನೆ.
ಇವರಿಬ್ಬರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಯುವತಿ ನವಾಜ್ನಿಂದ ದೂರಾಗಿ ಬೇರೆ ಮದುವೆಗೆ ಒಪ್ಪಿಗೆ ಸೂಚಿಸಿದ್ದಳು. ಇದರಿಂದ ಕೋಪಗೊಂಡು ಯುವಕ ಯಾರೂ ಇಲ್ಲದ ವೇಳೆ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ತಾನೂ ಕತ್ತಿಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


