ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬಳಿಕ ಟ್ರಸ್ಟ್ನ ಪ್ರಮುಖ ಸದಸ್ಯ ಅನಿಲ್ ಮಿಶ್ರಾ ಸೇರಿ ಇಬ್ಬರು ಪ್ರಮುಖ ಪದಾಧಿಕಾರಿಗಳು ಸ್ಥಾನಗಳಿಗೆ ಏಕಾಏಕಿ ರಾಜೀನಾಮೆ ನೀಡಿದ್ದಾರೆ.
ವಿಶೇಷ ತನಿಖಾ ತಂಡದ ಕಾರ್ಯಾಚರಣೆಯ ನಂತರ ಎಂಟು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣ ಎಣಿಕೆ ಮಾಡುವ ಸಿಬ್ಬಂದಿಯಾಗಿದ್ದರು. ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ ಈ ಇಬ್ಬರು ಪ್ರಮುಖರು ಟ್ರಸ್ಟ್ನಿಂದ ಹೊರನಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಈ ಕಳ್ಳತನದ ವಿರುದ್ಧ ನಿರಂತರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದವು ಹಾಗೂ ಉನ್ನತ ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು.
ಸಣ್ಣ ಮೀನುಗಳನ್ನು ಬಲಿಪಶು ಮಾಡಿ ದೊಡ್ಡವರನ್ನು ರಕ್ಷಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಎಸ್ಐಟಿ ತನಿಖೆಯ ಲೋಪ ಪ್ರಶ್ನಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಎಸ್ಐಟಿ ತನಿಖೆಯಲ್ಲಿ ಲೋಪಗಳಿರುವ ಕಾರಣ, ಪ್ರಕರಣವನ್ನು ಸುಪ್ರೀಂಕೋರ್ಟ್ ನಿಗಾದಲ್ಲಿ ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೂಡ ಸಲ್ಲಿಕೆಯಾಗಿದೆ.
ರಾಮಮಂದಿರಕ್ಕೆ ಬಂದ ದೇಣಿಗೆಯಲ್ಲಿ ನಾಪತ್ತೆಯಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜೂನ್ 7 ರಂದು ಅಖಿಲೇಶ್ ಯಾದವ್ ನ್ಯಾಯಾಲಯದ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಡಿದ ಮನವಿ ಅನ್ವಯ ಜೂನ್ 13 ರಂದು ಉತ್ತರ ಪ್ರದೇಶ ಸರ್ಕಾರವು ಎಸ್ಐಟಿ ರಚಿಸಿತ್ತು.


