ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಮೆಜೆಸ್ಟಿಕ್ ಬಸ್ ನಿಲ್ದಾಣ ಪನರ್ ನಿರ್ಮಾಣಗೊಳ್ಳಲಿದೆ ಎಂದು ಹೇಳಿದರು.
ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಾಗೂ ಸಾರಿಗೆ ನಿಗಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ನಗರದ ಪೂರ್ವ ಭಾಗದ ಕೆ.ಆರ್.ಪುರಂ ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು. ಸಾರಿಗೆ ನಿಗಮಗಳಿಗೆ ಆರ್ಥಿಕ ಚೈತನ್ಯ ತುಂಬುವ ಉದ್ದೇಶದಿಂದ 2 ಸಾವಿರ ಕೋಟಿ ರೂ. ಸಾಲವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತರಿ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.
ಡಿಜಿಟಲೀಕರಣ: ಸಾರಿಗೆ ಇಲಾಖೆಯ ಅಧೀನ ಕಛೇರಿಗಳಲ್ಲಿನ ಎಲ್ಲಾ ದಾಖಲೆಗಳನ್ನು ಹಂತಹಂತವಾಗಿ ಡಿಜಿಟಲೀಕರಣ ಮಾಡುವ ಉದ್ದೇಶ ಹೊಂದಲಾಗಿದೆ. 2025-26ನೇ ಸಾಲಿನಲ್ಲಿ ಐದು ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿನ ದಾಖಲೆಗಳನ್ನು ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚೆ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಎಐ ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಆಳವಡಿಸಲಾಗುವುದು ಎಂದು ಹೇಳಿದರು.
ಮಹಿಳೆಯರ ಸುಲೀಕರಣಕ್ಕಾಗಿ ಮತ್ತು ಸಾಮರ್ಥ್ಯ ಇದ್ಧಿಗಾಗಿ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 226.53 ಕೋಟೆ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿರುತ್ತಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗೆ ಶಕ್ತಿ ತುಂಬಿದ ಈ ಯೋಜನೆಗಾಗಿ 2024-25 ನೇ ಸಾಲಿನಲ್ಲಿ, 5,015 ಕೋಟಿ ವೆಚ್ಚ ಭರಿಸಲಾಗಿದ್ದು,2025-26 ಸಾಲಿನಲ್ಲಿ 5300 ಕೋಟಿ ಒದಗಿಸಲಾಗಿರುತ್ತದೆ ಎಂದರು.
716 ಇವಿ ಬಸ್ ಸೇರ್ಪಡೆ: 2024-25 ನೇ ಸಾಲಿನಲ್ಲಿ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟಾರೆಯಾಗಿ 2,381 ಸಂಖ್ಯೆಯ ಡೀಸೆಲ್ ಬಸ್ಸುಗಳನ್ನು ಹಾಗೂ 716 ಸಂಖ್ಯೆಯ ವಿದ್ಯುತ್ ಚಾಲಿತ ಬಸ್ಸುಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದರು.
2025-26ನೇ ಸಾಲಿನಲ್ಲಿ ಸ್ವಚ್ಛ ಪರಿಸರದ ಹಿತದೃಷ್ಟಿಯಿಂದ ವಿದ್ಯುತ್ ಚಾಲಿತ ಬಸ್ಸುಗಳನ್ನು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗಿದೆ,ಪಿಎಂ ಇಡ್ರೈಲ್ ಪಿಎಂ ಇಬಸ್ ಸೇವಾ ಮತ್ತು ಬಾಹ್ಯ ನೆರವಿನ ಯೋಜನೆಯಡಿ ಒಟ್ಟಾರೆ 14,750 ಹೊಸ ವಿದ್ಯುತ್ ಚಾಲಿತ ಬಸ್ಸುಗಳನ್ನು ಸೇರ್ಪಡೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ 9,000 ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಮಾಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.
ಜಿಸಿಸಿ ಬಸ್ಸು ಸೇರ್ಪಡೆ: ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1 ಸಾವಿರ ಹೊಸ ಡೀಸೆಲ್ ಜಿಸಿಸಿ ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು. ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.