ಕಾನೂನು ಅಧ್ಯಯನ ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸುವ ಯಾವುದೇ ಶಾಸನಬದ್ಧ ಅಧಿಕಾರವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಆಯಾ ಶಿಕ್ಷಣ ಸಂಸ್ಥೆಗಳು ಅವುಗಳದೇ ಆದ ನಿಯಮಾವಳಿಗಳ ಅನ್ವಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಹೇಳಿದೆ.
ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶ ಪ್ರಕಟಿಸಿದೆ.
ನಲ್ಸಾರ್ ವಿವಾದಕ್ಕೆ ಸಂಬಂಧಿಸಿದಂತೆ ಬಿಸಿಐ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಕೀಲರಾಗಿ ಕಾನೂನು ವೃತ್ತಿಯನ್ನು ನಿಯಂತ್ರಿಸುವ ಶಾಸನಬದ್ಧ ಚೌಕಟ್ಟಿನ ವ್ಯಾಪ್ತಿಗೆ ಬರುವ ಮೊದಲು ಅವರ ಮೇಲೆ ನಿಯಂತ್ರಣ ಸಾಧಿಸಲು ಬಿಸಿಐಗೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ವಿಶ್ವವಿದ್ಯಾಲಯಕ್ಕೆ ಸಿಜೆಐ ಪ್ರಸ್ತಾವಿತ ಭೇಟಿಯ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ನಲ್ಸಾರ್ನ 2026ರ ಪದವೀಧರರನ್ನು ಮುಂದಿನ ಆದೇಶದವರೆಗೆ ವಕೀಲರನ್ನಾಗಿ ನೋಂದಾಯಿಸದಂತೆ ರಾಜ್ಯ ಬಾರ್ ಕೌನ್ಸಿಲ್ಗಳಿಗೆ ಬಿಸಿಐ ಸೂಚನೆ ನೀಡಿತ್ತು. ಬಳಿಕ ವಿವಾದವಾಗಿ ವಿಷಯವನ್ನು ಸುಪ್ರೀಂ ಕೋರ್ಟ್ ಮುಂದೆ ಪ್ರಸ್ತಾಪಿಸಿದಾಗ, ಬಿಸಿಐ ಹಸ್ತಕ್ಷೇಪವನ್ನು ಸಿಜೆಐ ಆಕ್ಷೇಪಿಸಿ ಇದು ಸಂಪೂರ್ಣ ಅನಗತ್ಯ ಕ್ರಮ ಎಂದು ಹೇಳಿದ್ದರು.


