ಬಳ್ಳಾರಿಯಲ್ಲಿ ಕೆಲವು ದಿನಗಳ ಹಿಂದೆ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ.
ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 26 ಜನರನ್ನು ಬಂಧಿಸಿದ್ದಾರೆ, ಹಲವು ಮಂದಿ ಬಂಧನ ಭೀತಿಯಿಂದ ಬಳ್ಳಾರಿ ತೊರೆದಿದ್ದಾರೆ.ಡಿಜಿಟಲ್ ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿರುವ ಪೊಲೀಸರು, ಬಿಜೆಪಿಯ 33 ಹಾಗೂ ಕಾಂಗ್ರೆಸ್ನ 30ಕ್ಕೂ ಹೆಚ್ಚು ಜನರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಬಿಜೆಪಿಯ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಶ್ರೀರಾಮುಲು, ಮಾಜಿ ಶಾಸಕ ಸುರೇಶ್ ಬಾಬು, ರೆಡ್ಡಿ ಆಪ್ತ ಅಲಿಖಾನ್ ಸೇರಿದಂತೆ 33 ಜನರಿಗೆ ನೋಟಿಸ್ ನೀಡಲಾಗಿದೆ. ಗಲಭೆಯಲ್ಲಿ ಭಾಗಿಯಾಗದಿದ್ದರೂ 39 ವಾರ್ಡ್ಗಳ ಅನ್ವಯ ಲಿಸ್ಟ್ ಮಾಡಿ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀಡಿಯೊ ದೃಶ್ಯಗಳನ್ನು ಆಧರಿಸಿ 107 ಮಂದಿಗೆ ನೋಟಿಸ್ ನೀಡಿದ್ದು, ಯಾವುದೇ ತಾರತಮ್ಯ ಮಾಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.


