ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬೆಂಗಳೂರಿನ ನೆಲಮಂಗಲ ಚಂದನ್ ಕುಮಾರ್(37) ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲುವಿನ ನಿವಾಸಿ.
ಆರು ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಚಂದನ್ ಸ್ಥಳದಲ್ಲೇ ಅಸು ನೀಗಿದ್ದಾರೆ.
ಚಂದನ್ ಕುಮಾರ್ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ. ಲಭ್ಯವಾಗಿರುವ ದೃಶ್ಯಾವಳಿಗಳ ಪ್ರಕಾರ, ಚಂದನ್ ಅವರ ಕಾರಿನ ಮುಂಭಾಗದ ಗಾಜಿನ ಮೇಲೆ ಗುಂಡು ಹೊಕ್ಕಿರುವ ಗುರುತುಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಮಗನ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ನಿವಾಸದಲ್ಲಿ ಪೋಷಕರು ಮತ್ತು ಸಂಬಂಧಿಕರು ದುಃಖದಲ್ಲಿ ಕಣ್ಣೀರಿಡುತ್ತಿದ್ದಾರೆ. ಮಗನ ಶವನನ್ನು ತವರಿಗೆ ತರಲು ಸರ್ಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಕೆನಡಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹತ್ಯೆಗೆ ನಿಖರವಾದ ಕಾರಣವೇನು ಎಂಬುದು ತನಿಖೆ ಬಳಿಕ ಗೊತ್ತಾಗಬೇಕಿದೆ. ಚಂದನ್ ಕೆನಡಾ ಕನ್ನಡ ಸಮುದಾಯದಲ್ಲಿಯೂ ಸಕ್ರಿಯರಾಗಿದ್ದರು.


