Monday, September 07, 2026
Menu

ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿದ್ದ ಬಳ್ಳಾರಿ ಚಲೋ ವಿಫಲ: ಯತೀಂದ್ರ ಸಿದ್ದರಾಮಯ್ಯ

ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಜನಬೆಂಬಲವಿಲ್ಲದೆ ವಿಫಲವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು.

ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಉದ್ದೇಶದಿಂದ ಬಿಜೆಪಿ ಪಾದಯಾತ್ರೆ ಕೈಗೊಂಡಿತ್ತು. ಆದರೆ ಪಾದಯಾತ್ರೆ ಆರಂಭಿಸುವ ಮುನ್ನವೇ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಬಿಜೆಪಿಯ ಉದ್ದೇಶ ಈಗಾಗಲೇ ಈಡೇರಿದೆ. ಆದರೂ ರಾಜಕೀಯ ಕಾರಣಕ್ಕಾಗಿ ಇಲ್ಲದ ಆರೋಪಗಳನ್ನು ಮಾಡುತ್ತಾ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ನಿರೀಕ್ಷಿತ ಜನಬೆಂಬಲ ದೊರೆತಿಲ್ಲ. ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತುವ ಬದಲು ಕೇವಲ ಪ್ರಚಾರಕ್ಕಾಗಿ ಯಾತ್ರೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬರ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿವೆ. ಆದರೆ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ಜನರ ಸಮಸ್ಯೆಗಳ ಕುರಿತು ಸಮರ್ಪಕವಾಗಿ ಚರ್ಚೆ ನಡೆಸಲಿಲ್ಲ. ಇದೀಗ ಕೇವಲ ರಾಜಕೀಯ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸರ್ಕಾರದಂತೆ ರೈತರು ಅಥವಾ ಜನರು ಎಷ್ಟೇ ದಿನ ಪ್ರತಿಭಟನೆ ನಡೆಸಿದರೂ ಕಾಳಜಿ ವಹಿಸದ ಸರ್ಕಾರ ನಮ್ಮದಲ್ಲ. ಜನರ ಆಶಯಗಳಿಗೆ ಸ್ಪಂದಿಸುವ ಸರ್ಕಾರ ರಾಜ್ಯದಲ್ಲಿದೆ ಎಂದರು.
ಕಳೆದ ಬಾರಿ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿ ಸುಮಾರು ₹39 ಸಾವಿರ ಕೋಟಿ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿತ್ತು. ಕೇಂದ್ರದಿಂದ ₹18 ಸಾವಿರ ಕೋಟಿ ಪರಿಹಾರ ಕೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಲಿಲ್ಲ ಎಂದು ಟೀಕಿಸಿರು.

ಮುಖ್ಯಮಂತ್ರಿ ಹಾಗೂ ಸಚಿವರು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದರೂ ಕೇಂದ್ರ ಸರ್ಕಾರ ಕರ್ನಾಟಕದ ಜನರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ. ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಂತರ ರಾಜ್ಯಕ್ಕೆ ಸುಮಾರು ₹3,500 ಕೋಟಿ ಪರಿಹಾರ ದೊರೆಯಿತು. ರಾಜ್ಯದಿಂದ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ, ರಾಜ್ಯದ ಜನರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದಾಗ ಪರಿಹಾರ ನೀಡಲು ಹಿಂದೇಟು ಹಾಕುತ್ತಿದೆ. ಪ್ರತಿಬಾರಿಯೂ ಹೋರಾಟ ನಡೆಸಿ ಹಣ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬರ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ನೀಡದಿದ್ದರೆ, ಹಿಂದಿನಂತೆ ಹೋರಾಟ ನಡೆಸಲಾಗುವುದು. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಸಿದರು. ಎನ್ಡಿಆರ್ಎಫ್ ನಿಯಮಗಳನ್ನು ರೂಪಿಸಿರುವುದೇ ಕೇಂದ್ರ ಸರ್ಕಾರ. ಅದರಂತೆ ರಾಜ್ಯಕ್ಕೆ ದೊರೆಯಬೇಕಾದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಮತ್ತೊಬ್ಬ ಸಚಿವರು ರಾಜೀನಾಮೆ ನೀಡಲಿದ್ದಾರೆ ಎಂಬ ಬಿಜೆಪಿಯ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಹೇಳಿದಂತೆ ನಾವು ಮಾಡುವುದಕ್ಕೆ ಆಗುವುದಿಲ್ಲ” ಎಂದು ತಿರುಗೇಟು ನೀಡಿದರು.

Related Posts

Leave a Reply

Your email address will not be published. Required fields are marked *