ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್ ಆಗಿದ್ದು, ಮುಂಬೈ ಪ್ರವಾಸದಲ್ಲಿದ್ದ ಸಚಿವ ಜಮೀರ್ ವಾಪಸ್ ಆಗಿದ್ದಾರೆ. ಜಮೀರ್ ನಿಗದಿಗೊಳಿಸಿದ್ದ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿಗೆ ಬಂದಿದ್ದಾರೆ.
ಶಾಸಕ ಬಿಆರ್ ಪಾಟೀಲ್ ಅವರು ಸಚಿವ ಜಮೀರ್ ಖಾನ್ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ, ಸರ್ಕಾರಿ ಮನೆಗಳ ಹಂಚಿಕೆಗೆ ಲಂಚ ಪಡೆಯುತ್ತಿರುವ ಬಗ್ಗೆ ಆರೋಪಿಸಿದ್ದಾರೆ. ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ.
ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಎಂದು ಮಾಹಿತಿ ನೀಡಿದರೆ ಕೂಡಲೇ ಕ್ರಮಕೈಗೊಳ್ಳುವುದಾಗಿ ಜಮೀರ್ ಖಾನ್ ಆಪ್ತ ಕಾರ್ಯದರ್ಶಿ ಹೇಳಿದ್ದಾರೆ. ಆಳಂದ ಮತ್ತು ಅಫಜಲಪುರ ಕ್ಷೇತ್ರ ಸೇರಿದಂತೆ ಹಲವೆಡೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಪಾಟೀಲ್ ಆರೋಪ ಮಾಡಿದ್ದಾರೆ. ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಆರ್ ಪಾಟೀಲ ಜೊತೆಗೆ ಆದ ಮಾತುಕತೆ ಬಗ್ಗೆ ಸಚಿವ ಜಮೀರ್ ಅವರಿಗೆ ಆಪ್ತ ಕಾರ್ಯದರ್ಶಿ ಸರ್ಫರಾಜ್ ಮಾಹಿತಿ ನೀಡಿದ್ದಾರೆ. ಗುರುವಾರ ದೂರವಾಣಿ ಕರೆ ಮಾಡಿ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರದ ಬಗ್ಗೆ ಬಿ ಆರ್ ಪಾಟೀಲ್ ಮಾತನಾಡಿದ್ದರು.
ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ಸಚಿವ ಜಮೀರ್ ಅವರಿಗೆ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ, ಈ ಕೂಡಲೇ ಜಮೀರ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡುವಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.