ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದ್ದು, ಕಾರಿನಲ್ಲಿದ್ದ ನಾಗೇಂದ್ರ (30) ಎಂಬವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಕಾರು ಬೆಂಗಳೂರಿನಿಂದ ಅಂಕೋಲಾಗೆ ಂಚರಿಸುತ್ತಿದ್ದಾಗ ಈ ದುರಂತ ನಡೆದಿದೆ, ಕಾರಿನಲ್ಲಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಗೇಂದ್ರ ಹಾಗೂ ಯುವತಿ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ನಾಗೇಂದ್ರ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ಕಾರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಗಾಬರಿಗೊಂಡ ಯುವತಿ ಚಲಿಸುತ್ತಿದ್ದ ಕಾರಿನಿಂದಲೇ ಹೊರಗೆ ಜಿಗಿದಿದ್ದಾಳೆ. ಕೆಲವೇ ಕ್ಷಣಗಳಲ್ಲಿ ಕಾರು ಭಾರಿ ಶಬ್ದದೊಂದಿಗೆ ಸ್ಫೋಟಗೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ನಾಗೇಂದ್ರ ಕಾರಿನಿಂದ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ.
ಸ್ಫೋಟದ ತೀವ್ರತೆ ನೋಡಿದರೆ ಕಾರಿನಲ್ಲಿ ಬಾಂಬ್ ಇತ್ತಾ ಎಂಬ ದಟ್ಟ ಅನುಮಾನ ಮೂಡಿದೆ. ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಬಳಿಕ ಇದು ಕೊಲೆ ಯತ್ನ, ಆತ್ಮಹತ್ಯೆ ಅಥವಾ ವಿಧ್ವಂಸಕ ಕೃತ್ಯವೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ.


