ಕಲಬುರ್ಗಿ: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಜನಸಂದಣಿ ನಿರ್ವಹಣೆ ಕುರಿತ ಕಾಯ್ದೆ ಕುರಿತ ಪ್ರಶ್ನೆಗೆ ‘ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡುತ್ತಾರೆ. ಕರಡು ಬಂದ ಬಳಿಕ ಅದರ ಬಗ್ಗೆ ನಿರ್ಧರಿಸುತ್ತೇವೆ’ ಎಂದು ತಿಳಿಸಿದರು.
ಜಿಎಸ್ಟಿ ಮೂಲಕ 1 ಲಕ್ಷದ 12 ಸಾವಿರ ಕೋಟಿ ಮೊತ್ತ ಕರ್ನಾಟಕಕ್ಕೆ ಬಂದಿದೆ. ಕರ್ನಾಟಕವು ಗರಿಷ್ಠ ಜಿಎಸ್ಟಿ ಮೊತ್ತವನ್ನು ಪಡೆದ ರಾಜ್ಯ ಎಂದು ಅವರು ತಿಳಿಸಿದರು. ಕೇಂದ್ರ ಸರಕಾರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.
ರಾಜ್ಯ ಸರಕಾರಕ್ಕೆ ಮ್ಯಾಚಿಂಗ್ ಗ್ರಾಂಟ್ ಕೊಡಲು ಸಾಧ್ಯವಾಗುತ್ತಿಲ್ಲ; ಮ್ಯಾಚಿಂಗ್ ಗ್ರಾಂಟ್ ಕೊಟ್ಟಲ್ಲಿ ಕೇಂದ್ರವೂ ಅನುದಾನ ಬಿಡುಗಡೆ ಮಾಡುತ್ತದೆ. ಅದನ್ನು ಮಾಡದೆ, ಕೇಂದ್ರ ಸರಕಾರ ಅನುದಾನ ಕೊಡುತ್ತಿಲ್ಲ ಎಂದು ದೂಷಿಸುವುದು ಸರಿಯೇ ಎಂದು ಕೇಳಿದರು. ರಾಜ್ಯ ಸರಕಾರದ ಬಳಿಕ ಮ್ಯಾಚಿಂಗ್ ಗ್ರಾಂಟ್ ಮಾತ್ರವಲ್ಲದೇ, ಅಭಿವೃದ್ಧಿಗೆ ಕೊಡಲು ಹಣ ಇಲ್ಲ ಎಂದು ಆಕ್ಷೇಪಿಸಿದರು.
ಅಹಮದಾಬಾದ್ ವಿಮಾನ ದುರಂತ ಅತ್ಯಂತ ಖೇದಕರ. ದುರ್ಘಟನೆ ಕುರಿತು ತನಿಖೆ ಪ್ರಾರಂಭವಾಗಿದೆ. ಬ್ಲ್ಯಾಕ್ ಬಾಕ್ಸ್ಗಳೂ ಸಿಕ್ಕಿವೆ. ಇಂಥ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಬೆಂಗಳೂರಿನ ಕಾಲ್ತುಳಿತಕ್ಕೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೇ ಕಾರಣಕರ್ತರು. ಕಾಲ್ತುಳಿತಕ್ಕೆ ಪೊಲೀಸ್ ಅಧಿಕಾರಿಗಳು ಕಾರಣಕರ್ತರಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಅವಿವೇಕತನದಿಂದ ನಡೆದುಕೊಂಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಶಾಸಕ ಡಾ. ಅವಿನಾಶ್ ಜಾಧವ್, ಕಲಬುರ್ಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ್ ಬಿ ಪಾಟೀಲ್, ಕಲಬುರ್ಗಿ ಗ್ರಾಮಾತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್ ಮತ್ತಿತರ ಮುಖಂಡರು ಇದ್ದರು.