ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು.
ಮಹಾಬಲಿಪುರಂನಲ್ಲಿ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವಕುಮಾರ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಕೇಂದ್ರ ಬಜೆಟ್ನಲ್ಲಿ ₹5,300 ಕೋಟಿ ಅನುದಾನ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ಘೋಷಣೆಯಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಬೊಮ್ಮಾಯಿ ಅವರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಮೇಲ್ದಂಡೆ ಭದ್ರಾ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ₹5,300 ಕೋಟಿ ಘೋಷಿಸಿದ್ದರು. ಸಂಸತ್ತಿನಲ್ಲೇ ಘೋಷಣೆ ಮಾಡಿದರೂ ಈ ಹಣವನ್ನು ಈವರೆಗೆ ಬಿಡುಗಡೆ ಮಾಡಿಲ್ಲ. ಇದರಿಂದ ಯೋಜನೆಗೆ ತೊಂದರೆಯಾಗುತ್ತಿದೆ. ದಯವಿಟ್ಟು ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಖಾಸಗಿ ವಲಯದ ಕಂಪನಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸುತ್ತಿರುವ ರೀತಿಯ ಬಗ್ಗೆಯೂ ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು. ರಾಜ್ಯದ ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ CSR ನಿಧಿಯನ್ನು ಎಲ್ಲಿ ಬಳಸಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಲು ಸೂಕ್ತ ನೀತಿ ಅಥವಾ ನಿಯಮ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.
ಅವರು ಒಂದು ರಾಜ್ಯದಲ್ಲಿ ವ್ಯವಹಾರ ಮಾಡುತ್ತಾರೆ, ಆದರೆ ಬೇರೆಡೆ ಹೂಡಿಕೆ ಮಾಡುತ್ತಾರೆ. ನಮಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ಇದೆ. ಹೀಗಾಗಿ CSR ನಿಧಿಯನ್ನು ಎಲ್ಲಿ ಮತ್ತು ಹೇಗೆ ಖರ್ಚು ಮಾಡಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುವಂತಾಗಬೇಕು ಎಂದು ಹೇಳಿದರು. ಪ್ರತಿಕ್ರಿಯಿಸಿದ ಅಮಿತ್ ಶಾ, ಸಲಹೆಯನ್ನು ಭಾಗಶಃ ಒಪ್ಪಿಕೊಂಡರು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮುಖ್ಯಸ್ಥರಾಗಿರುವ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸುವಂತೆ ಸೂಚಿಸಿದರು.
ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಯಾವುದೇ ರಾಜಕೀಯ ನೇಮಕಾತಿ ಮಾಡಿಲ್ಲ. ಐಎಎಸ್ ಅಧಿಕಾರಿಗಳೇ ಅವುಗಳ ಮುಖ್ಯಸ್ಥರಾಗಿದ್ದಾರೆ. ನಿಮಗೆ ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ನೀವು ಅವರೊಂದಿಗೆ ಮಾತನಾಡಿ. ನಾನೂ ಅವರೊಂದಿಗೆ ಮಾತನಾಡುತ್ತೇನೆ ಎಂದು ಶಾ ಹೇಳಿದರು.


