ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ ಏರಿಕೆ ಆಗದಂತೆ ನಿಯಂತ್ರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕುರಿತು ಶನಿವಾರ ವಿಧಾನಸೌಧದಲ್ಲಿ ಗೃಹ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದ ಅವರು, ರಾಜ್ಯದ ಕರಾವಳಿ ಭಾಗದಲ್ಲಿ ಭದ್ರತೆ ಬಿಗಿ ಗೊಳಿಸಿ. ಕೋಮು ಗೂಂಡಾಗಳ ಪಟ್ಟಿ ಪರಿಷ್ಕರಣೆ ಮಾಡಿ ಕಟ್ಟುನಿಟ್ಟಿನ ನಿಗಾ ವಹಿಸಿ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದಾರೆ.
ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುವವರ ಪಟ್ಟಿ ಸಿದ್ಧಪಡಿಸಬೇಕು. ಮುಖ್ಯವಾಗಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಕದಡುವ ಕೆಲಸ ಮಾಡುವ ಕೋಮು ಗೂಂಡಾಗಳನ್ನು ನಿಯಂತ್ರಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿ ಜನರ ರಕ್ಷಣೆ ಹಾಗೂ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ನಿರ್ವಹಿಸಬೇಕು. ಜತೆಗೆ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಭದ್ರತೆ ವಿಚಾರದಲ್ಲಿ ರಾಜಿ ಆಗಬಾರದು. ಎಲ್ಲಾ ಕಮಿಷನರೇಟ್ಗಳು ಎಚ್ಚರಿಕೆಯಿಂದ ಇರ ಬೇಕು. ಪ್ರಮುಖ ಸ್ಥಾವರಗಳಲ್ಲಿ ಭದ್ರತೆ ಹೆಚ್ಚಿಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಡೆ ವಿಶೇಷ ನಿಗಾ ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪಾಕಿಸ್ತಾನ ಹಾಗೂ ಭಾರತ ನಡುವೆ ಕದನ ವಿರಾಮ ಘೋಷಣೆ ಆಗಿದ್ದರೂ ಎಚ್ಚರಿಕೆ ಕ್ರಮಗಳನ್ನು ಮುಂದುವರಿಸಬೇಕು ಎಂದು ಸ್ಪಷ್ಟಪಡಿಸಿದರು. ಪೊಲೀಸ್ ಇಲಾಖೆ ಸಂಪೂರ್ಣ ಎಚ್ಚರಿಕೆಯಿಂದ ಇರಬೇಕು. ಕೇಂದ್ರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ವರಿಷ್ಠಾಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು. ಕಮಿಷನ ರೇಟ್ ಇರುವಲ್ಲಿ ಲ್ಲಿ ಪ್ರತಿನಿತ್ಯ ಸುದ್ದಿಗಾರರಿಗೆ ವಿವರಣೆ ನೀಡಬೇಕು. ಸುಳ್ಳು ಸುದ್ದಿಗಳನ್ನು ತಡೆಗಟ್ಟುವ ಕೆಲಸ ಮಾಡ ಬೇಕು ಎಂದು ಸಿಎಂ ಹೇಳಿದ್ದಾರೆ.
ಸಾರ್ವಜನಿಕ ರಕ್ಷಣಾ ವ್ಯವಸ್ಥೆ ಬಲಪಡಿಸಿ ತರಬೇತಿ ನೀಡಬೇಕು. ವೈದ್ಯಕೀಯ ತುರ್ತುಪರಿಸ್ಥಿತಿ ಸನ್ನಿವೇಶನ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಅಗ್ನಿಶಾಮಕ ದಳ ಸೇರಿ ಎಲ್ಲಾ ನಾಗರಿಕ ಸೇವಾ ಘಟಕಗಳೂ ಅಲರ್ಟ್ ಆಗಿ ಇರಬೇಕು. ಪೊಲೀಸರಿಗೆ ಮುಂದಿನ ನಿರ್ದೇಶನದವರೆಗೆ ರಜೆ ನೀಡಬಾರದು ಎಂದಿದ್ದಾರೆ.
ಗುಪ್ತಚರ ಬಲಪಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಫ್ಯಾಕ್ಟ್ಚೆಕ್ ಆಗಬೇಕು,ಸುಳ್ಳು ಸುದ್ದಿ ಎಂದು ಗೊತ್ತಾದ ತಕ್ಷಣ ಆರಂಭದಲ್ಲೇ ಸ್ಪಷ್ಟೀಕರಣ ನೀಡಬೇಕು. ವೈದ್ಯಕೀಯ ಆಸ್ಪತ್ರೆಗಳು, ದೇವಸ್ಥಾನಗಳು, ಶಿಕ್ಷಣ ಸಂಸ್ಥೆಗಳು, ಎಲ್ಲವುಗಳ ಭದ್ರತೆ ಹೆಚ್ಚಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡು ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ತನ್ಮೂಲಕ ಕೋಮುಸಾಮರಸ್ಯ ಕದಡುವ ಯಾವುದೇ ಶಕ್ತಿಗಳಿಗೂ ಅವಕಾಶ ನೀಡಬಾರದು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.
ಪಾಕಿಸ್ತಾನದ ಎಲ್ಲ ಪ್ರಜೆಗಳನ್ನು ರಾಜ್ಯದಿಂದ ಹೊರಹಾಕುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಬಳಿ ಮೂವರು ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಾತ್ರ ಇದ್ದಾರೆ. ಅವರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಒದಗಿಸಿದ್ದೇವೆ ಎಂದು ಹೇಳಿದರು.
ಕದನ ವಿರಾಮ ಘೋಷಿಸಿದ್ದಾರೆಂದರೆ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲ್ಲ ಎಂದಲ್ಲ. ಕದನ ವಿರಾಮ ಘೋಷಿಸಿದ್ದರೂ ಯಾವುದೇ ಕಾರಣಕ್ಕೂ ಭಯೋತ್ಪಾದಕ ಕೃತ್ಯಗಳನ್ನು ಸಹಿಸುವುದಿಲ್ಲ. ಭಯೋತ್ಪಾದನೆ ಯನ್ನು ಮೂಲೋತ್ಪಾಟನೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಭಯೋತ್ಪಾ ದನೆ ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.