Menu

ದಕ್ಷಿಣ‌ ಕನ್ನಡ, ಉಡುಪಿ, ಶಿವಮೊಗ್ಗಕ್ಕೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

ದಕ್ಷಿಣ‌ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿ, ಮಂಗಳೂರಲ್ಲಿ ನಡೆದ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುವುದಾಗಿ ತಿಳಿಸಿದ್ದಾರೆ.

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಗೃಹ ಸಚಿವರು ಹೇಳಿದ್ದಾರೆ.

ನಕ್ಸಲ್ ನಿಗ್ರಹ ಕಾರ್ಯಪಡೆಯ ಅರ್ಧ ಸಿಬ್ಬಂದಿಯನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ. ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ, ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ ಎಂದಿದ್ದಾರೆ.

ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಸಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *