ಮೈಸೂರಿನಲ್ಲಿ ಕಾಂಗ್ರೆಸ್ ನ ಅಂತರಿಕ ಸಂಘರ್ಷದ ಶಕ್ತಿಪ್ರದರ್ಶನ ಮಾಡಲು ಸಮಾವೇಶ ಮಾಡಲಾಗುತ್ತಿದೆ. ಸಮಾವೇಶ ಮಾಡುವಂಥ ಸಾಧನೆಗಳನ್ನೇನು ಕಾಂಗ್ರೆಸ್ ಮಾಡಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಧನಾ ಸಮಾವೇಶದ ಹೆಸರಿನಲ್ಲಿ ಹಿಂದೆ ಹಾಸನದಲ್ಲಿ ಶಕ್ತಿ ಪ್ರದರ್ಶನ ಮಾಡಬೇಕಿತ್ತು. ಅದು ಈಗ ಮೈಸೂರಿನಲ್ಲಿ ನಡೆಯಲಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಶಾಸಕರು ಮತ್ತು ಸಚಿವರ ಜೊತೆ ಸಭೆ ಮಾಡಿರುವುದು ಎಲ್ಲವೂ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ. ಆಂತರಿಕವಾಗಿರುವ ಸಂಘರ್ಷ ಪೂರ್ಣ ವಿರಾಮ ಇಲ್ಲದೇ ಮುಂದುವರೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲಿಯವರೆಗೂ ಇದಕ್ಕೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೆ ಇದು ಮುಂದುವರೆಯುತ್ತದೆ. ಕಾಂಗ್ರೆಸ್ ಹೈಕಮಾಂಡ್ ಗೂ ಈ ಗೊಂದಲ ಗೋಜಲುಗಳೇ ಬೇಕಾಗಿದೆ ಎನಿಸುತ್ತದೆ ಎಂದರು.
ಶರಾವತಿ ಪಂಪ್ ಸ್ಟೋರೇಜ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅತ್ಯಂತ ಕಡಿಮೆ ಖರ್ಚಿನಲ್ಲಿ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವಂಥಾದ್ದಾಗಿದೆ. ಅಲ್ಲಿ 38 ಹೆಕ್ಟೇರ್ ಅರಣ್ಯ ಪ್ರದೇಶ ನಾಶವಾಗುತ್ತಿದೆ. ಅದರ ಬದಲು ಬೇರೆ ಕಡೆಗೆ ಅರಣ್ಯ ಬೆಳೆಸಬೇಕು ಹಾಗೂ ಸುತ್ತಲಿನ ಅರಣ್ಯ ಪ್ರದೇಶ ಕಾಪಾಡಬೇಕು. ಈಗಾಗಲೇ ಕೆಲವು ಷರತ್ತುಗಳೊಂದಿಗೆ ಅನುಮತಿ ದೊರೆತಿದೆ. ಅವುಗಳನ್ನು ಪಾಲನೆ ಮಾಡಿ ಮಾಡಬೇಕು ಎಂದು ಹೇಳಿದರು.
ಇನ್ನು ಸಿಗಂಧೂರು ಸೇತುವೆ ಉದ್ಘಾಟನೆ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಘಂನೆಯಾಗಿದೆ ಎಂಬ ಕಾಂಗ್ರೆಸ್ ಆರೋಪದ ಕುರಿತು ಕೇಳಿದ ಪ್ರಶ್ನೆಗೆ, ಯಾವುದೇ ರೀತಿಯ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಹೇಳಿದರು.