ಬೆಂಗಳೂರ: ಮಾರ್ಚ್ 17 (ಉದಯಕಾಲ ನ್ಯೂಸ್) ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ತೊರೆದಿರುವುದಾಗಿ ಘೋಷಣೆ ಮಾಡಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದರು. ಈ ಬೆಳವಣೆಗೆ ಮಧ್ಯೆ ಕಾಂಗ್ರೆಸ್ ನಾಯಕರು ಸಿ ಎಂ ಇಬ್ರಾಹಿಂ ಅವರನ್ನು ಮನವೊಲಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.
ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಜಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಮ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಇಬ್ರಾಹಿಂ ಅವರನ್ನು ಪಕ್ಷದಲ್ಲಿಯೇ ಮುಂದುವರೆಯುವಂತೆ ಜಮೀರ್ ಮನವೊಲಿಕೆ ಪ್ರಯತ್ನ ನಡೆಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಇಬ್ರಾಹಿಂ ಅವರ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.
ಬದಲಾದ ರಾಜಕೀಯ ಪರಿಸ್ಥಿತಿಗಳು ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಈ ಹಿಂದೆ ಇಬ್ರಾಹಿಂ ತಿಳಿಸಿದ್ದರು. ಇದಾದ ಬಳಿಕ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ನಡುವೆ ಜೆಡಿಎಸ್ ಗೆ ಹೋಗಬೇಕೋ.. ಇಲ್ಲವೇ ಇಬ್ರಾಹಿಂ ಕಾಂಗ್ರೆಸ್ ನಲ್ಲೇ ಉಳಿಯುತ್ತಾರೆಯೇ ಅನ್ನೋ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರೂ ಇಬ್ರಾಹಿಮ್ ಭೇಟಿ ಮಾಡಿ ಮಾತನಾಡಿರುವುದು ಕುತೂಹಲಕ್ಕೆ ಮತ್ತಷ್ಟು ಎಡೆ ಮಾಡಿ ಕೊಟ್ಟಿದೆ.