ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಆಹಾರ ಖಾತೆ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕೆಹೆಚ್ ಮುನಿಯಪ್ಪ ಆ ಖಾತೆ ಬೇಡವೆಂದು ಕ್ಯಾತೆ ತೆಗೆದಿದ್ದು, ನೀರಾವರಿ, ಕೃಷಿ, ಸಮಾಜ ಕಲ್ಯಾಣದಂತ ದೊಡ್ಡ ಖಾತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವೆ, ಮತ್ತೆ ಅದೇ ಖಾತೆ ನೀಡಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜಕೀಯದಲ್ಲಿ ಎಂಟು ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ ನಾನು, ಸಂಪುಟದಲ್ಲಿ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ ಎಂದಿದ್ದಾರೆ.
ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮುನಿಯಪ್ಪ, ನಾನು ಈಗಾಗಲೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಗೊಂದಲಗಳಿಗೆ ಆಸ್ಪದ ನೀಡದೆ ನನ್ನ ಖಾತೆಯನ್ನು ತಕ್ಷಣ ಬದಲಾಯಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.
ರಾಮಲಿಂಗಾ ರೆಡ್ಡಿಯವರು ಜಲಸಂಪನ್ಮೂಲ ಖಾತೆ ಬೇಡ ಬೆಂಗಳೂರು ಅಭಿವೃದ್ಧಿ ಖಾತೆ ನೀಡಬೇಕೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುನಿಯಪ್ಪ ಅವರೂ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


