Menu

ರಾಜ್ಯದಲ್ಲಿ ಕೋವಿಡ್‌ ಭೀತಿ: ಆರೋಗ್ಯ ಇಲಾಖೆಯಲ್ಲಿ ರಜೆ ಕಟ್‌

ರಾಜ್ಯದಲ್ಲಿ ಕೋವಿಡ್‌ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯ ರಜೆಯನ್ನು ಮೊಟಕುಗೊಳಿಸಲಾಗಿದೆ. ಪರಿಸ್ಥಿತಿ ತಿಳಿ ಆಗುವ ತನಕ ಯಾರಿಗೂ ರಜೆ ಕೊಡದಂತೆ ಆರೋಗ್ಯ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ.

ಯಾವ ಸಿಬ್ಬಂದಿಯೂ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚಿಸಲಾಗಿದೆ. ಕೇಂದ್ರದಿಂದ ಮಾರ್ಗಸೂಚಿ ಬಂದ ಬಳಿಕ ಲಸಿಕೆ ನೀಡಲು ಆರಂಭಿಸುವುದಾಗಿಯೂ ಸಭೆಯಲ್ಲಿ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕೋವಿಡ್ ತಪಾಸಣೆ ​ವಿಚಾರದಲ್ಲಿ ಹಳೆಯ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳುತ್ತೇವೆ. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ಟೆಸ್ಟ್ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ,ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​ ಪಾಟೀಲ್​ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಲಾಗಿತ್ತು.
ಸೋಂಕು ಲಕ್ಷಣ ಇರುವ ಮಕ್ಕಳಿಗೆ ಆಯಾ ಶಾಲೆಯ ಆಡಳಿತ ಮಂಡಳಿ ರಜೆ ನೀಡಬೇಕು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ರಜೆ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬಾಣಂತಿಯರು, ಮಕ್ಕಳು, 50 ವರ್ಷ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್​ ಧರಿಸಬೇಕು. ಗರ್ಭಿಣಿಯರು ಮಾಸ್ಕ್ ಧರಿಸಬೇಕು. ವಯಸ್ಸಾದವರು ಜನಸಂದಣಿ ಇರುವ ಸ್ಥಳಗಳಿಗೆ ತೆರಳಬಾರದು. ರೋಗಲಕ್ಷಣ ಕಂಡುಬಂದರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಶರಣಪ್ರಕಾಶ್ ತಿಳಿಸಿದ್ದಾರೆ. ಪರೀಕ್ಷಾ ಕಿಟ್​ಗಳನ್ನು ಕೂಡ ಆರ್ಡರ್ ಮಾಡಲಾಗಿದೆ. ವಿದೇಶದಿಂದ ಬರುವವರು‌ ಕೋವಿಡ್​ ಟೆಸ್ಟ್​ ಮಾಡಿಕೊಳ್ಳಬೇಕು ಎಂದಿದ್ದಾರೆ.

ಜನಜಂಗುಳಿ ಪ್ರದೇಶಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಬೇಕು. ಹ್ಯಾಂಡ್‌ ಸ್ಯಾನಿಟೈಸ್‌ ಮಾಡಿಕೊಳ್ಳುವುದು ಉತ್ತಮ ಎಂದು ಕೆ.ಸಿ.ಜನರಲ್ ಆಸ್ಪತ್ರೆಯ ಡಾ.ಮೋಹನ್ ಸಲಹೆ ನೀಡಿದ್ದಾರೆ. ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಆತಂಕದ ಹಿನ್ನೆಲೆ ಹೈ ಆಲರ್ಟ್ ಕೈಗೊಳ್ಳಲಾಗಿದೆ, ಕೋವಿಡ್‌ ಕೇಸ್‌ಗಳಿಗೆ ಬೆಡ್ ಮೀಸಲಿಡಲು ಸಿದ್ಧತೆ ನಡೆಸಲಾಗಿದೆ.

Related Posts

Leave a Reply

Your email address will not be published. Required fields are marked *