ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 18ರೊಳಗೆ ಪೂರ್ಣಗೊಳಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅವರು ಅಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಮೀಕ್ಷೆ ಅವಧಿ ವಿಸ್ತರಣೆ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರೈಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಶೇ.80 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಮೀಕ್ಷೆ ಶೀಘ್ರವಾಗಿ ಪೂರ್ಣಗೊಳಿಸಲು ಸಿಎಸ್ ತಾಕೀತು ಮಾಡಿದ್ದಾರೆ.
ಕರ್ತವ್ಯ ಲೋಪ ಎಸಗಿದ 13 ಸಿಬ್ಬಂದಿಗೆ ನೋಟಿಸ್
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ 13 ಸಿಬ್ಬಂದಿ ಗೆ ನೋಟಿಸ್ ಜಾರಿಯಾಗಿದೆ. ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ 13 ಗಣತಿದಾರರಿಗೆ ನಗರಪಾಲಿಕೆ ಜಂಟಿ ಅಯುಕ್ತರು ನೋಟಿಸ್ ನೀಡಿದ್ದಾರೆ.
ತಮ್ಮ ವ್ಯಾಪ್ತಿಯ ವಾರ್ಡಗಳಲ್ಲಿ 5 ಕ್ಕಿಂತ ಕಡಿಮೆ ಮನೆಗಳ ಗಣತಿ ಮಾಡಿರುವ ಅರೋಪದಡಿ ಈ ಕ್ರಮ ಕೈಗೊಂಡಿದ್ದಾರೆ. ಗಣತಿಗೆ ನೇಮಿಸಿದ 13 ಮೇಲ್ವಿಚಾರಕರಿಗೆ ನೋಟಿಸ್ ನೀಡಲಾಗಿದೆ.
ನಿಮ್ಮಿಂದ ಗಣತಿ ಕಾರ್ಯ ಪ್ರಗತಿ ಕುಂಠಿತಗೊಂಡಿದೆ, ಸರ್ಕಾರದ ಅದೇಶಕ್ಕೆ ಕಿಂಚ್ಚಿತ್ತು ಬೆಲೆ ನೀಡಿಲ್ಲ, ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡುಬಂದಿದೆ, ಕೆಳ ಹಂತದ ಗಣತಿದಾರರಿಗೆ ನೀವು ಸರಿಯಾದ ಮಾರ್ಗದರ್ಶನ ನೀಡಿಲ್ಲ, ಗಣತಿ ಕುಂಠಿತ ಕೊಂಡಿದೆ, ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು, ಇಲ್ಲದಿದ್ದರೆ ಶೈಕ್ಷಣಿಕ ಸಮೀಕ್ಷೆಯಲ್ಲಿ ವಿಳಂಬ ಧೋರಣೆ ಎಂದು ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.