ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ಅನ್ಯಾಯ- ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಡಿ ದೇವರಾಜ ಅರಸು ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದಿವಂಗತ ದೇವರಾಜ ಅರಸು ಅವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿರುವುದಾಗಿ ಹೇಳಿದರು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು,
ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು.
ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದು ಹೇಳಿದರು.
ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿದ್ದ ರಾಜಕಾರಣಿ ಅರಸು, ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ , ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ.ಕುಮಾರಸ್ವಾಮಿ ಅವರು ಮತ್ತು ಬಿಜೆಪಿಯವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.