Menu

ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ

ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ.

ಕೆಆರ್ ಎಸ್ ಹಿನ್ನೀರಿನ ಪ್ರದೇಶದಲ್ಲಿ ಐಷಾರಾಮಿ ರೆಸಾರ್ಟ್ ಗಳ ನಿರ್ಮಾಣ ಹಾಗೂ ಭೂ ಒತ್ತುವರಿಯಿಂದಾಗಿ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ಹೀಗಾಗಿ ಭೂ ಒತ್ತುವರಿ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರವರಿಗೆ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ ಹಾಗೂ ದಿನೇಶ್ ಗೂಳಿಗೌಡ ಅವರು ಒತ್ತಾಯಿಸಿದ್ದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್.ಪೇಟೆ ತಾಲೂಕುಗಳಲ್ಲಿ ಮತ್ತು ಮೈಸೂರು ಜಿಲ್ಲೆಯ ಕೆ.ಆರ್.ನಗರ, ಮೈಸೂರು ಮತ್ತು ಹುಣಸೂರು ತಾಲೂಕಿನಲ್ಲಿ ಜಲಾಶಯದ ಹಿನ್ನೀರಿನ ಅಂಚಿನಲ್ಲಿರುವ ಭೂ ಮಾಲೀಕರು ಭೂ ಒತ್ತುವರಿ ಮಾಡುತ್ತಿರುವುದು ಮತ್ತು ಐಶಾರಾಮಿ ರೆಸಾರ್ಟ್ಗಗಳ ನಿರ್ಮಾಣ ಮಾಡುತ್ತಿದ್ದಾರೆ.

ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದ ಸಂಗ್ರಹಣಾ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ನಾಲಾ ಕೊನೆ ಭಾಗದ ಮಳವಳ್ಳಿ, ಮದ್ದೂರು ಭಾಗದ ಸಾವಿರಾರು ಅಚ್ಚುಕಟ್ಟು ಪ್ರದೇಶದ ರೈತರಿಗೆ ವ್ಯವಸಾಯಕ್ಕೆ ನೀರೊದಗಿಸಲು ಹಾಗೂ ಕುಡಿಯುವ ನೀರಿಗಾಗಿ ತೊಂದರೆ ಉಂಟಾಗುವ ಸಂಭವವಿರುತ್ತದೆ.

ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನ ಪ್ರದೇಶವು 26640 ಎಕರೆಗಳಿದ್ದು, ಜಲಾಶಯದಿಂದ ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಸುಮಾರು 2.76 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲಾಗುತ್ತಿದೆ. ಮೈಸೂರು ನಗರಕ್ಕೆ 1.579 ಟಿ.ಎಂ.ಸಿ ಹಾಗೂ ಬೆಂಗಳೂರು, ಇನ್ನಿತರ ನಗರ ಪಟ್ಟಣಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಲಾಗುತ್ತಿದೆ ಮತ್ತು ವಿದ್ಯುತ್ ಉತ್ಪಾದನ ಘಟಕಗಳಿಗೆ ನೀರನ್ನು ಬಳಕೆ ಮಾಡಲಾಗುತ್ತದೆ.

ಆದರೆ ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆಗುತ್ತಿರುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಂಠಿತವಾಗಲಿದ್ದು ಇದರಿಂದ ನೀರಿನ ಸಮಸ್ಯೆ ಉಲ್ಬಣಿಸಲಿದೆ. ಹೀಗಾಗಿ ಜಲಾಶಯದ 130 ಅಡಿಗಳ (Contour) ನಕ್ಷೆಗಳನ್ನು ನೀರಾವರಿ ಇಲಾಖೆಯಿಂದ ಪಡೆದು ಈ ವಿಷಯದ ಕುರಿತಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ, ಕಂದಾಯ ಇಲಾಖೆ, ಭೂ ದಾಖಾಲಾತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ಸರ್ವೆ ಕಾರ್ಯ ನಡೆಸಿ ಒತ್ತುವರಿ ಇದ್ದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು, ಅಣೆಕಟ್ಟೆಯ 130 ಅಡಿಯ ಕಾಂಟೋರ್ ಗಡಿಭಾಗಕ್ಕೆ ಶಾಶ್ವತವಾಗಿ ಗಡಿ ಕಲ್ಲುಗಳನ್ನು, ಸೂಚನಾ ಫಲಕಗಳನ್ನು ಅಳವಡಿಸಲು ಸೂಕ್ತ ನಿರ್ದೇಶನ ನೀಡಬೇಕು. ಹಿನ್ನೀರಿನ ಪ್ರದೇಶದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಕಾವಲು ವ್ಯವಸ್ಥೆ (watch and ward) ನೋಡಲು ಪೋಲೀಸ್ ಇಲಾಖೆ ಮತ್ತು ಪರಿಸರ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಶಾಸಕರು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಡಿ.ಕೆ.ಶಿವಕುಮಾರ್ ಅವರು, ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಆದೇಶಿಸಿದ್ದಾರೆ. ಇದರಿಂದ ಹಿನ್ನೀರಿನ ಪ್ರದೇಶದಲ್ಲಿ ತಲೆ ಎತ್ತಿರುವ ಹಾಗೂ ಎತ್ತಲಿರುವ ಅಕ್ರಮ ರೆಸಾರ್ಟ್ ಗಳಿಗೆ ಕಡಿವಾಣ ಬಿದ್ದಂತಾಗಲಿದೆ. ಜೊತೆಗೆ ನೀರು ಸಂಗ್ರಹಣ ಸಾಮರ್ಥ್ಯ ಹೆಚ್ಚಾಗಿ ನಾಲಾ ಕೊನೆ ಭಾಗಕ್ಕೂ ನೀರು ಹರಿಯುವುದರಿಂದ ರೈತರ ಸಮಸ್ಯೆ ಕೂಡ ಬಗೆಹರಿಯಲಿದೆ.

Related Posts

Leave a Reply

Your email address will not be published. Required fields are marked *