ಸಚಿವ ಸತೀಶ್ ಜಾರಕಿಹೊಳಿಯ ಸೋದರಿಯ ಪತಿ, ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಬೆಳಗಾವಿಯ ದೂರದರ್ಶನ ಕೇಂದ್ರದ ಆವರಣದಲ್ಲಿರುವ ನಿವಾಸಕ್ಕೆ ಅಧಿಕಾರಿಗಳು ಪ್ರವೇಶಿಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಭದ್ರತೆಗಾಗಿ 10 ಕ್ಕೂ ಹೆಚ್ಚು ಅರೆಸೇನಾ ಪಡೆ ನಿಯೋಜನೆಯಾಗಿದೆ.
ಮೈಸೂರಿನಲ್ಲಿ ಮಂಜುನಾಥ್ ಅವರ ಸ್ನೇಹಿತೆಯ ಮನೆ, ಬೆಂಗಳೂರಿನ ಅಪಾರ್ಟ್ಮೆಂಟ್, ಅರಸೀಕೆರೆಯಲ್ಲಿರುವ ಆಪ್ತನ ಮನೆ ಮತ್ತು ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತನ ಮನೆ ಮೇಲೂ ಶೋಧ ನಡೆಸಲಾಗಿದೆ. ಹಾಸನದ ಅರಸೀಕೆಯ ಕಟ್ಟಡದಲ್ಲೂ ತಪಾಸಣೆ ಕೈಗೊಳ್ಳಲಾಗಿದೆ.
ವೈ. ಮಂಜುನಾಥ್ ಅವರು ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿದ್ದು, ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೇನಾಮಿ ಹೆಸರಲ್ಲಿ ಭಾರಿ ಪ್ರಮಾಣದ ಜಮೀನು, ಬಾರ್, ರೆಸ್ಟೋರೆಂಟ್ ಸೇರಿದಂತೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವಿದೆ. ಇಡಿ ಈ ಆರೋಪಗಳಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತನಿಖೆ ನಡೆಸುತ್ತಿದೆ.
ಸದ್ಯ ವೈ. ಮಂಜುನಾಥ್ ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿದ್ದಾರೆ ಎನ್ನಲಾಗಿದೆ, ಅಲ್ಲೂ ಇಡಿ ದಾಳಿ ನಡೆಸಿ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.


