ಸಂಭಾವನೆಯನ್ನುನಗದು ರೂಪದಲ್ಲಿ ಪಡೆಯುವ ಮೂಲಕ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ತೆಲುಗು ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ರಿಯಲ್ ಎಸ್ಟೇಟ್ ಕಂಪನಿಗಳ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಬಾಬು ಸಂಭಾವನೆಯಲ್ಲಿ ಅರ್ಧಭಾಗವನ್ನು ನಗದು ರೂಪದಲ್ಲಿ ಪಡೆದಿದ್ದರು ಎಂಬ ಮಾಹಿತಿ ಮೇರೆಗೆ ಸಮನ್ಸ್ ಜಾರಿಗೊಳಿಸಿರುವ ಇಡಿ, ಏಪ್ರಿಲ್ 28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿದಾಗ ಈ ಕಂಪನಿಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹೇಶ್ ಬಾಬು ನಗದು ರೂಪದಲ್ಲಿ ಸಂಭಾವನೆ ಪಡೆದಿರುವುದು ಬೆಳಕಿಗೆ ಬಂದಿತ್ತು.
ಮಹೇಶ್ ಬಾಬು ಅವರಿಗೆ ಜಾಹಿರಾತಿನಲ್ಲಿ ನಟಿಸಿದ್ದಕ್ಕಾಗಿ 5.9 ಕೋಟಿ ರೂ. ಸಂಭಾವನೆ ನಿಗದಿಪಡಿಸಲಾಗಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ತೆಲಂಗಾಣ ಪೊಲೀಸರು ಹೈದರಾಬಾದ್ ಪ್ರಾಪರ್ಟೀಸ್ ಲಿಮಿಟೆಡ್ನ ನರೇಂದ್ರ ಸುರಾನಾ ಮತ್ತು ಸಾಯಿ ಸೂರ್ಯ ಡೆವಲಪರ್ಸ್ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಅನಧಿಕೃತ ಲೇಔಟ್ಗಳಲ್ಲಿ ಪ್ಲಾಟ್ಗಳನ್ನು ಮಾರಾಟ ಮಾಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ. ಒಂದೇ ಪ್ಲಾಟ್ ಅನ್ನು ಹಲವು ಬಾರಿ ಮಾರಾಟ ಮಾಡಿದ ಮತ್ತು ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಸುಳ್ಳು ಭರವಸೆಗಳನ್ನು ನೀಡಿದ ಆರೋಪ ಕಂಪನಿಯ ಮೇಲಿದೆ.
ಯಾವುದೇ ವ್ಯಕ್ತಿಯು ಒಂದೇ ವಹಿವಾಟಿಗೆ ಅಥವಾ ಒಂದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯಿಂದ ದಿನದಲ್ಲಿ 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸುವಂತಿಲ್ಲ. ಈ ನಿಯಮವು ಶುಲ್ಕಗಳು, ದೇಣಿಗೆ, ಸಂಭಾವನೆ ಎಲ್ಲದ್ದಕ್ಕೂ ಅನ್ವಯವಾಗುತ್ತದೆ. ಈ ಮಿತಿಯನ್ನು ಉಲ್ಲಂಘಿಸಿದರೆ ಆದಾಯ ತೆರಿಗೆ ಕಾಯ್ದೆ 271DA ಅಡಿಯಲ್ಲಿ ಸ್ವೀಕರಿಸಿದ ಮೊತ್ತಕ್ಕೆ ಸಮಾನವಾದ ದಂಡ ವಿಧಿಸಲಾಗುತ್ತದೆ. 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು UPI, NEFT ಮತ್ತು RTGS ಮೂಲಕ ಪಾವತಿಸಬೇಕಾಗುತ್ತದೆ.