ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ.
ಪ್ರಜಾಪ್ರತಿನಿಧಿ ಕಾಯಿದೆ ಅಡಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಜಾತಿ ಮತ್ತು ಶಿಕ್ಷಣ ಪ್ರಮಾಣ ಪತ್ರಗಳ ಕುರಿತಂತೆ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಭಾರತೀಯ ಕಾನೂನು ಆಯೋಗ ಗಮನ ಹರಿಸಬೇಕು ಎಂದೂ ನ್ಯಾಯಪೀಠ ತಿಳಿಸಿದೆ. ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಔರಾದ್ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅರ್ಜಿ ವಜಾಗೊಳಿಸಿ ನೋಟಿಸ್ ರದ್ದುಪಡಿಸಲು ನಿರಾಕರಿಸಿತು.
ನ್ಯಾಯಾಲಯ, ಅರೆ ನ್ಯಾಯಾಲಯ ಅಥವಾ ಆಡಳಿತಾತ್ಮಕ ಪ್ರಾಧಿಕಾರಗಳ ಮುಂದಿರುವ ಕ್ರಿಮಿನಲ್ ಮತ್ತು ಸಿವಿಲ್ ವ್ಯಾಜ್ಯಗಳ ಕುರಿತಂತೆ ಅಭ್ಯರ್ಥಿಗಳು ಎಲ್ಲ ರೀತಿಯ ಮಾಹಿತಿ ಒದಗಿಸಬೇಕು. ಇದಕ್ಕಾಗಿ ಸೂಕ್ತ ಮಾರ್ಗಸೂಚಿಗಳನ್ನು ಸರ್ಕಾರ ಸಿದ್ಧಪಡಿಸಬೇಕು. ಈ ಮಾಹಿತಿ ಲಭ್ಯವಾದಲ್ಲಿ ಜನರನ್ನು ಪ್ರತಿನಿಧಿಸುವ ಜನಪ್ರತಿನಿಧಿಯ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗಲಿದೆ ಎಂದು ಹೈಕೋರ್ಟ್ ತಿಳಿಸಿದೆ.
ಒಂದು ರಾಜ್ಯದಲ್ಲಿ ಜನಿಸಿ ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಿ ನೆಲೆಸಿ ಆ ರಾಜ್ಯದಲ್ಲಿ ಅವರ ಜಾತಿಯ ಕುರಿತ ಅಧಿಸೂಚನೆ ಹೊರಡಿಸಿರುವುದು ಅನ್ವಯವಾಗು ವುದಿಲ್ಲ ಎಂಬುದರ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ನ್ಯಾಯಪೀಠ ಉಲ್ಲೇಖಿಸಿದೆ. ಅರ್ಜಿದಾರ ಚವ್ಹಾಣ್ ಅವರು ಕರ್ನಾಟಕದಲ್ಲಿ ಜನಿಸಿ ರುವುದಾಗಿ ತಿಳಿಸಿದ್ದಾರೆ. ಈ ಅಂಶವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯೇ ನಿರ್ಧರಿಸಬೇಕು. ನ್ಯಾಯಾಲಯಗಳು ನಿರ್ಣಯ ಕೈಗೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.