ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.
ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.
ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್ಲ ಎಂಬ ಕಾರಣಕ್ಕೆ ಇಂತಹ ಕ್ರಮ ಅನುಸರಿಸುವುದು ಒಳ್ಳೆಯದಲ್ಲ ಎಂದಿದ್ದಾರೆ.
ಸರಿಯಾದ ಆರ್ಥಿಕ ಶಿಸ್ತು ಮತ್ತು ಸಿದ್ಧತೆಗಳಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತ ಗೊಂಡಿವೆ. ಬೊಕ್ಕಸ ಬರಿದಾಗಿ ಸರ್ಕಾರ ದಿವಾಳಿಯಾಗಿದೆ. ಇದನ್ನು ಹೇಗಾದರೂ ಸರಿಪಡಿಸಿಕೊಳ್ಳಲು ಹೆಣಗುತ್ತಿರುವ ಸರ್ಕಾರ, ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದೆ. ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಾಗಿ ಇಂತಹ ದರ ಮತ್ತು ಶುಲ್ಕ ಹೆಚ್ಚಳದಂತಹ ವಾಮ ಮಾರ್ಗಗಳ ಮೂಲಕ ಸರ್ಕಾರ ಉದ್ಯಮದ ಶೋಷಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಮದ್ಯ ಉತ್ಪಾದನೆ, ಬಾಟ್ಲಿಂಗ್, ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇಕಡಾ ನೂರರಷ್ಟು ಹೆಚ್ಚಳಕ್ಕೆ ಮುಂದಾಗಿದೆ. ಇದಕ್ಕಾಗಿ ಅಬಕಾರಿ ಕಾನೂನುಗಳಿಗೆ ತಿದ್ದುಪಡಿ ಮಾಡಿ ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದೆ. ಜುಲೈ 1 ರಿಂದ ಪರಿಷ್ಕೃತ ದರಗಳು ಜಾರಿಗೊಳ್ಳಲಿವೆ. ಆ ಮೂಲಕ ಉದ್ಯಮದ ಅಂತ್ಯಕ್ಕೆ ಮೊಳೆ ಹೊಡೆದಂತಾಗಲಿದೆ. ಇಲಾಖೆಗೆ 40 ಸಾವಿರ ಕೋಟಿಯ ಗುರಿ ನಿಗದಿ ಮಾಡಲಾಗಿದೆ. ಇದನ್ನು ತಲುಪಲು ಅಧಿಕಾರಿಗಳು ಇದ್ದಬದ್ದ ಎಲ್ಲಾ ಅವಕಾಶಗಳನ್ನು ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಉದ್ಯಮವನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಉದ್ಯಮದ ಹಿತದೃಷ್ಟಿಯಿಂದ ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಬಿಟ್ಟು ಉದ್ಯಮ, ಮಾರಾಟಗಾರರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಸನ್ನದು ಶುಲ್ಕ ಪರಿಷ್ಕರಣೆಯನ್ನು ಮರು ಪರಿಶೀಲಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.