ಆಸ್ತಿ ದಾಖಲೆ ಪಡೆದುಕೊಳ್ಳುವುದಕ್ಕಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದ ತಂದೆ ಮತ್ತು ಮಗಳನ್ನು ಹತ್ಯೆ ಮಾಡಿರುವ ಘಟನೆಯು ಬೆಳಗಾವಿಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಮಗಳು ಶಶಿಕಲಾ ಕುಂದರಗಿ (26) ಹತ್ಯೆಯಾದವರು. ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರುದ್ರಪ್ಪ ಹಾಗೂ ಸೋದರರ ಮಧ್ಯೆ ವ್ಯಾಜ್ಯ ಇತ್ತು ಎಂದು ಹೇಳಲಾಗಿದೆ. ಆಸ್ತಿ ಪಾಲುದಾರಿಕೆಗೆ ಅರ್ಜಿ ಸಲ್ಲಿಸಲು ರುದ್ರಪ್ಪ ಗ್ರಾಮ ಪಂಚಾಯಿತಿಗೆ ಬಂದಿದ್ದ ವೇಳೆ ಈ ದಾಳಿ ನಡೆದಿದೆ.
ರುದ್ರಪ್ಪ ಗ್ರಾಮ ಪಂಚಾಯಿತಿಗೆ ಬಂದಿರುವ ವಿಚಾರ ತಿಳಿದು ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಸೇರಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯಿತಿ ಒಳಗಡೆಯೇ ರುದ್ರಪ್ಪ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ, ತಂದೆಯನ್ನು ಬಿಡಿಸಲು ಮುಂದಾದ ಪುತ್ರಿ ಶಶಿಕಲಾ ಮೇಲೂ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ಸಹೋದರರ ನಡುವೆ ವ್ಯಾಜ್ಯವಿತ್ತು, ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು ಎನ್ನಲಾಗಿದೆ.
ರುದ್ರಪ್ಪ ಅವರಿಗೆ ಬಂದಿದ್ದ ಜಮೀನನ್ನು ಅವರು ಮೊದಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಇದೆ ಎಂದು ಹೇಳಲಾಗಿದೆ.
ಜಮೀನು ದಾಖಲೆ ಮಾಡಿಸಲು ರುದ್ರಪ್ಪ ಧಾರವಾಡದಿಂದ ಕಾರು ಬಾಡಿಗೆ ಪಡೆದು ಗ್ರಾಮಕ್ಕೆ ಬಂದಿರುವ ವಿಚಾರ ತಿಳಿದ ಬಳಿಕ ಸಹೋದರರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.


