ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದೆಡರು ದಿನಗಳಲ್ಲಿ ಕನಿಷ್ಠ ತಾಪಮಾನ 13–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಬೀಸಲಿದ್ದು, ಸುರಕ್ಷತಾ ಕ್ರಮವಾಗಿ ಹವಾಮಾನ ಇಲಾಖೆ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಡಿಸೆಂಬರ್ 14, 15 ಹಾಗೂ 16ರಂದು ತೀವ್ರ ಚಳಿ ಜೊತೆ ರಾಜ್ಯದಲ್ಲಿ ಶೀತಗಾಳಿ ಬೀಸಲಿದ್ದು, ಬೀದರ್, ಕಲಬುರಗಿ, ರಾಜಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಬೆಂಗಳೂರಿನಲ್ಲಿ 12ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಉತ್ತರ ಭಾರತದಿಂದ ಒಣಹವೆ ಪ್ರವೇಶಿಸಿರುವುದೇ ಚಳಿ ಹೆಚ್ಚಾಗಲು ಪ್ರಮುಖ ಕಾರಣವೆಂದು ಹವಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಡಿಸೆಂಬರ್ 17ರ ನಂತರ ನಿಧಾನವಾಗಿ ತಾಪಮಾನ ಏರಿಕೆಯಾಗುವ ನಿರೀಕ್ಷೆ ಇದೆ. ಎರಡ್ಮೂರು ದಿನ ಶೀತ ಅಲೆಯ ಕಾರಣ ಮಕ್ಕಳು ಹಾಗೂ ವಯಸ್ಸಾದವರು ಮುಂಜಾನೆ ವಾಕ್ ಮಾಡುವುದನ್ನು ತಪ್ಪಿಸಬೇಕು. ಸಂಜೆ ಬಳಿಕ ಹೊರಗಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಬಿಸಿ ನೀರು ಬಳಕೆ ಜೊತೆ ಸಮತೋಲನ ಆಹಾರ ಸೇವನೆ, ಹಿಟರ್ ಬಳಕೆ ಹಾಗೂ ಉಣ್ಣೆಯ ಬಟ್ಟೆ ಧರಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ , ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ, ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 14.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


