ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿಯವರಾದ ದಿ. ಎಸ್ ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಅವಿಭಜಿತ ಕಾಂಗ್ರೆಸ್ ನ ಎಐಸಿಸಿ ಅಧ್ಯಕ್ಷರಾಗಿದ್ದವರು. ಪ್ರತಿ ವರ್ಷ ಅವರ ಜನ್ಮದಿನ ಹಾಗೂ ಪುಣ್ಯತಿಥಿಯಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸರ್ಕಾರ ಸಲ್ಲಿಸುತ್ತಾ ಬಂದಿದೆ ಎಂದರು.
ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ಕಂಡ ಅಪ್ರತಿಮ ನಾಯಕರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾದರು. ಏಕೀಕರಣದ ಹೋರಾಟದಲ್ಲಿ ಭಾಗವಹಿಸಿ, ಕರ್ನಾಟಕದ ಏಕೀಕರಣದ ನಂತರ ಮೊದಲನೇ ಮುಖ್ಯ ಮಂತ್ರಿಗಳಾದರು. ಜನಪರ ಕಾಳಜಿಯಿದ್ದ ಮುಖ್ಯಮಂತ್ರಿಗಳು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.