ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕ ನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ ನಿಧನರಾಗಿದ್ದಾರೆ.
ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಶುಕ್ರವಾರ ರಾತ್ರಿ ಅವರೂ ಕೊನೆಯುಸಿರೆಳೆದರು.
ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.
103 ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ಇಹಲೋಕ ವನ್ನು ತೃಜಿಸಿದ್ದಾರೆ. ಭೀಮಣ್ಣ ಖಂಡ್ರೆ ಅವರ ಅಗಲಿಕೆಯಿಂದ ನಾಡು ಹಿರಿಯ ನಾಯಕ, ಸಮಾಜ ಸೇವಕ, ಸ್ವಾತಂತ್ರ್ಯ ಹೋರಾಟಗಾರರನ್ನು ಕಳೆದುಕೊಂಡಿದೆ. ಹಿರಿಯ ಜೀವದ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ ಸೇರಿದಂತೆ ನಾಡಿನ ಸರ್ವ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ 2019ರಲ್ಲಿ ನಿಧನ ಹೊಂದಿದ್ದರು.
ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿ ಬಡಜನರಿಗೆ ರೈತರಿಗೆ ನ್ಯಾಯ ಕೊಡಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿ, 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದರು.
1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
1976ರಲ್ಲಿ ಕೆಲವು ಅಧಿಕಾರಿಗಳು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದಡಿ ಬಲವಂತದಿಂದ ಯುವಜನರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದುದನ್ನು ಖಂಡಿಸಿ, ತಾವೇ ಜನರ ಮನವೊಲಿಸಿ ಒಂದೇ ದಿನದಲ್ಲಿ 2500ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಿ ಒಂದೇ ದಿನ ಒಂದೇ ನಗರದಲ್ಲಿ ನಡೆದ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆಯ ದಾಖಲೆ ಸೃಷ್ಟಿಸಿದ್ದರು. ಅಂದು ಬಿಬಿಸಿಯಲ್ಲಿ ಈ ಸುದ್ದಿ ಪ್ರಸಾರವಾಗಿತ್ತು.
ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು.
ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು.
ಶಿಕ್ಷಣತಜ್ಞ:
ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.
ತಮ್ಮ ದೀಕ್ಷಾ ಗುರು ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರ ಆಣತಿಯಂತೆ ಬಸವಕಲ್ಯಾಣದಲ್ಲಿ ಈಗಿರುವ ಶಿವಲಿಂಗಾಕಾರದ ಅನುಭವ ಮಂಟಪ ನಿರ್ಮಾಣಕ್ಕೆ ತನು,ಮನ, ಧನ ಅರ್ಪಿಸಿದ ಅವರು, ಸ್ವಯಂ ತಲೆಯ ಮೇಲೆ ಮರಳು, ಜಲ್ಲಿಯ ಕಾಂಕ್ರೀಟ್ ಹೊತ್ತು ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಿದ್ದರು.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು.
ಶಾಲಾ ಕಾಲೇಜು ದಾಖಲೆಗಳ ಪ್ರಕಾರ ಭೀಮಣ್ಣ ಖಂಡ್ರೆ ಅವರ ಜನ್ಮ ದಿನಾಂಕ 1927 ಜನವರಿ ಆದರೂ, ಭೀಮಣ್ಣ ಖಂಡ್ರೆ ಅವರೇ ಹೇಳುತ್ತಿದ್ದಂತೆ ಅವರು ಹುಟ್ಟಿದ್ದು 1923ರ ಜನವರಿ 8ರಂದು. ಮೊನ್ನೆಯಷ್ಟೇ ಅವರು 102 ವರ್ಷ ಪೂರೈಸಿದ್ದರು.
ಶತಾಯುಷಿ ಲೋಕನಾಯಕ:
ಬಾಲ್ಯದಲ್ಲಿ ತೀವ್ರ ಅನಾರೋಗ್ಯಪೀಡಿತರಾದಾಗ ಮುಚಳಂಬದ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳಿಂದ ಯೋಗ ಕಲಿತು ನಿತ್ಯ ಯೋಗ, ಪ್ರಾಣಾಯಾಮ ಹಾಗೂ ಇಷ್ಟಲಿಂಗ ಪೂಜೆ ಮಾಡುತ್ತಾ, ಶುದ್ಧ ಸಸ್ಯಾಹಾರವನ್ನಷ್ಟೇ ಸ್ವೀಕರಿಸುತ್ತಿರುವುದೇ ತಮ್ಮ ಶತಾಯುಷ್ಯದ ಗುಟ್ಟು ಎಂದು ಹೇಳುತ್ತಿದ್ದ ಭೀಮಣ್ಣಖಂಡ್ರೆ ಅವರು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರ ಪರಮ ಭಕ್ತರಾಗಿದ್ದರು. ಭೀಮಣ್ಣ ಖಂಡ್ರೆ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಪಟ್ಟದ್ದೇವರು ಭೀಮಣ್ಣ ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.


