ಬೆಳಗಾವಿ: ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಹಾಗೂ ಜಿಬಿಎ ಎರಡನೇ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಗುರುವಾರ ಮಂಡನೆ ಮಾಡಲಾಗಿದೆ.
ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಪಡಿಸುವ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ-2025ನ್ನು ವಿಧಾನಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮಂಡನೆ ಮಾಡಿದರು.
ಈ ಮಸೂದೆಯಂತೆ ಇನ್ನು ಮುಂದೆ ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ ಹಾಗೂ ಪಂಚಾಯ್ತಿ ನಡೆಸಿದವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುವುದು. ಬಹಿಷ್ಕಾರಕ್ಕೆ ಒತ್ತಡ ಹೇರಿ ಪರೋಕ್ಷವಾಗಿ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ.
ಬಹಿಷ್ಕಾರಕ್ಕೆ ಒಳಗಾಗುವವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸುವ ಆದೇಶ ಹೊರಡಿಸಬಹುದು. ಗ್ರೂಪ್-ಎ ಅಧಿಕಾರಿಗಳನ್ನು ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿಗಳನ್ನಾಗಿ ನಿಯೋಜಿಸಬಹುದಾಗಿದೆ.
ಇವೆಲ್ಲವೂ ನಿಷೇಧ
ಗ್ರಾಮ ಅಥವಾ ಸಮುದಾಯದಿಂದ ಹೊರಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು, ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು, ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು, ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು, ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು, ಮಾನವ ಹಕ್ಕುಗಳನ್ನು ನಿರಾಕರಿಸುವುದು ಹಾಗೂ ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ಮಸೂದೆಯಡಿ ನಿಷೇಧಿಸಲಾಗಿದೆ.
ಜಿಬಿಎ ಮಸೂದೆ ಮಂಡನೆ:
ಗ್ರೇಟರ್ ಬೆಂಗಳೂರು (2ನೇ ತಿದ್ದುಪಡಿ) ಮಸೂದೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಪರವಾಗಿ ಸಚಿವ ಹೆಚ್.ಸಿ.ಮಹದೇವಪ್ಪ ವಿಧಾನಸಭೆಯಲ್ಲಿ ಮಂಡನೆ ಮಾಡಿದರು. ಲೋಕಸಭೆ, ರಾಜ್ಯಸಭೆ ಸದಸ್ಯರು, ವಿಧಾನಸಭೆ, ಪರಿಷತ್ ಸದಸ್ಯರುಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರಾಗಿ ಸೇರ್ಪಡೆಗೊಳಿಸು ಹಾಗೂ ಕೆಲ ನಿಯಮಗಳಿಗೆ ತಿದ್ದುಪಡಿ ತರುವ ಉದ್ದೇಶದಿಂದ ಮಸೂದೆ ರೂಪಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ, ಸದಸ್ಯರಾಗಿ ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನಸಭೆ ಮತ್ತು ರಾಜ್ಯ ವಿಧಾನಪರಿಷತ್ತಿನ ಸದಸ್ಯರುಗಳನ್ನು ಸೇರಿಸಲು ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪದನಿಮಿತ್ತ ಸದಸ್ಯರುಗಳನ್ನಾಗಿ ಸರ್ಕಾರದ ಅಪರ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ/ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನು ಸೇರಿಸಲು, ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿರನ್ನು ಸೇರಿಸಲು ಈ ತಿದ್ದುಪಡಿ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.
6 ತಿಂಗಳ ಮೊದಲು ಜನಗಣತಿ:
ಹೊಸದಾಗಿ ಸೇರಿಸಲಾದ ಸ್ಥಳೀಯ ಪ್ರದೇಶಕ್ಕಾಗಿ ಪುನರ್ ವಿಂಗಡನೆಯನ್ನು ಮೂರು ತಿಂಗಳುಗಳ ಅವಧಿಯೊಳಗೆ ಮಾಡಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.
ನಗರ ಪಾಲಿಕೆಯ ಮುಂದಿನ ಸಾರ್ವತ್ರಿಕ ಚುನಾವಣೆ ಕನಿಷ್ಠ ಆರು ತಿಂಗಳ ಮೊದಲು ಜನಗಣತಿ ಫಲಿತಾಂಶಗಳ ಲಭ್ಯವಿದ್ದಲ್ಲಿ, ಪ್ರತಿ ಜನಗಣತಿ ಬಳಿಕ ನಗರ ಪಾಲಿಕೆಯ ಮುಂದಿನ ಸಾರ್ವತ್ರಿಕ ಚುನಾವಣೆಯ ಮೊದಲು ಹೊಸ ಪುನರ್ವಿಂಗಡನೆ ಪ್ರಕ್ರಿಯೆಯನ್ನು ನಡೆಸಲು ನಿಯಮ ತಿದ್ದುಪಡಿ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ ಸೇರಿದ ಸ್ಥಳೀಯ ಪ್ರದೇಶದಲ್ಲಿ ಸಾಮಾನ್ಯ ನಿವಾಸಿಯನ್ನು ಆ ಸ್ಥಳೀಯ ಪ್ರದೇಶಕ್ಕೆ ಚುನಾವಣೆ ನಡೆಸುವವರೆಗೆ ಪ್ರತಿ 20,000 ಜನಸಂಖ್ಯೆಗೆ ಕನಿಷ್ಟ ಒಬ್ಬ ವ್ಯಕ್ತಿಯಂತೆ ಆ ನಿರ್ದಿಷ್ಟ ನಗರ ಪಾಲಿಕೆಗೆ ಹೆಚ್ಚುವರಿ ಸದಸ್ಯನಾಗಿ ನಾಮನಿರ್ದೇಶಸಲು ಪ್ರಸ್ತಾಪಿಸಲಾಗಿದೆ. ನಾಮನಿರ್ದೇಶಿತ ವ್ಯಕ್ತಿಯು ನಗರ ಪಾಲಿಕೆಯಲ್ಲಿ ಮತದಾನ ಮಾಡುವ ಅಧಿಕಾರ ಹೊಂದಿಲ್ಲ.


