ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು.
ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ ಎನ್ನುವ ಮೂಲಕ ತಮ್ಮ ಶಿಕ್ಷಕರನ್ನು ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ ಇಬ್ಬರಿಗೂ ಧನ್ಯವಾದ ಹೇಳಿದರು.
ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ರೂಪಿಸುವುದು ವೈಚಾರಿಕ ಶಿಕ್ಷಣ. ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ. ಇಂಥಾ ಶಿಕ್ಷಣ ನಮ್ಮ ಸರ್ಕಾರದ ಗುರಿ. ಸಂವಿಧಾನ ನಮಗೆ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಂವಿಧಾನದ ಮೌಲ್ಯಗಳಾಗಿದ್ದು ಇವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಮನುಷ್ಯತ್ವ ಹೊಂದಿರುವ ಅತ್ಯುನ್ನತ ನಾಗರಿಕರನ್ನು ಸೃಷ್ಟಿಸಬಹುದು. ಇದನ್ನು ಶಿಕ್ಷಕರು ಅರ್ಥ ಮಾಡಿಕೊಂಡು ನಾಗರಿಕ ಸಮಾಜ ರೂಪಿಸಬೇಕು ಎಂದು ಹೇಳಿದರು.
ಜಾತಿ ವ್ಯವಸ್ಥೆ ಇರುವ ನಮ್ಮ ಸಮಾಜದಲ್ಲಿ ಬದಲಾವಣೆ ಆಗಿ ಮಾನವೀಯ ವ್ಯವಸ್ಥೆ ರೂಪುಗೊಳ್ಳಬೇಕು. ಶಿಕ್ಷಣ ಕಲಿತೂ ಜಾತಿ ಆಚರಿಸುವುದು, ಕಂದಾಚಾರ-ಮೌಢ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ. ಆದ್ದರಿಂದ ವೈಚಾರಿಕತೆ, ವೈಜ್ಞಾನಿಕತೆ, ಪರಧರ್ಮ ಸಹಿಷ್ಣುತೆ ಮೈಗೂಡಿಸಿಕೊಳ್ಳುವ ಶಿಕ್ಷಣ ಕೊಡುವ ನೈತಿಕ ಮತ್ತು ವೃತ್ತಿಪರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.
ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣ ಆಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜೊತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ ಅವಕಾಶ ಪಡೆದು ಹೆಚ್ಚೆಚ್ಚು ರ್ಯಾಂಕ್ ಪಡೆಯುತ್ತಿರುವವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರೂ, ರಾಷ್ಟ್ರಪತಿಗಳೂ ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡವಳಿಕೆಗಳು ಮಕ್ಕಳ ಮೇಲೆ ಅಪಾರ ಪ್ರಭಾವ ಬೀರುತ್ತವೆ. ಆದ್ದರಿಂದ ಶಿಕ್ಷಕರು ಮಾನವೀಯ ಮತ್ತು ನಾಗರಿಕ ಮೌಲ್ಯಗಳನ್ನು ಪಾಲಿಸಬೇಕು. ಮೊಬೈಲ್ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ. “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯ ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಸಿಎಂ ಕರೆ ನೀಡಿದರು.
ಸಾವಿತ್ರಿ ಫುಲೆ ಮತ್ತು ಫಾತಿಮಾ ಶೇಕ್ ಇಬ್ಬರೂ ದಮನಿತ ಮಹಿಳೆಯರಿಗೆ ಶಿಕ್ಷಣ ಕೊಟ್ಟ ಮೊದಲ ಶಿಕ್ಷಕಿಯರು. ಇವರಿಗೆ ಸೆಗಣಿಯನ್ನೆಲ್ಲಾ ಎಸೆದು ಅವಮಾನಿಸಲಾಗಿತ್ತು. ಈ ಎಲ್ಲಾ ಅವಮಾನ ಸಹಿಸಿಕೊಂಡೂ ಶಿಕ್ಷಣ ನೀಡಿದರು ಎಂದು ಸ್ಮರಿಸಿದರು.