ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ ಭಾಗಿಯಾಗಿರುವ ಭಜರಂಗದಳವನ್ನು ಬ್ಯಾನ್ ಮಾಡಬೇಕು ಎನ್ನುವ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಕಾರ್ಯಕರ್ತನ ಹತ್ಯೆಯಾಗಿರುವುದು ನನಗೆ ತಿಳಿದಿದೆ. ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಗಮನಿಸಿಲ್ಲ. ಇದರ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ” ಎಂದರು.
ಸಿಎಲ್ ಪಿ ಸಭೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ವಿಚಾರ ಚರ್ಚೆಯಾಯಿತೇ ಎಂದು ಕೇಳಿದಾಗ, “ಪತ್ರಿಕೆಗಳಲ್ಲಿ, ಟಿವಿ ಮಾಧ್ಯಮಗಳಲ್ಲಿ ಬಂದಿದ್ದು ಯಾವುದು ಚರ್ಚೆಯಾಗಿಲ್ಲ” ಎಂದು ಉತ್ತರಿಸಿದರು.
ಧರ್ಮಸ್ಥಳ ವಿಚಾರದಲ್ಲಿ ನೀವು ಷಡ್ಯಂತ್ರ ನಡೆದಿದೆ ಎಂದು ಈ ಹಿಂದೆ ಹೇಳಿದ್ದೀರಿ. ಈಗ ಸಿಕ್ಕಿರುವ ಚಾರ್ಜ್ ಶೀಟ್ ನಲ್ಲಿ ದೂರುದಾರರೇ ಆರೋಪಿಗಳು ಎನ್ನುವ ಮಾಹಿತಿ ಇದೆ ಎಂದು ಕೇಳಿದಾಗ, “ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು ಹಾಗೂ ಅವರು ಯಾರೂ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಆದ ಕಾರಣಕ್ಕೆ ನಾನು ಧೈರ್ಯದಿಂದ ಈ ವಿಚಾರವನ್ನು ಹೇಳಿದ್ದೆ” ಎಂದು ಪ್ರತಿಕ್ರಿಯಿಸಿದರು.
ಚಾರ್ಜ್ ಶೀಟ್ ಪ್ರತಿಯಲ್ಲಿ ಏನಿದೆ ಎಂದು ನಾನು ಓದಿಲ್ಲ. ಸರ್ಕಾರ ಕಾನೂನಿನ ಅಡಿ ಏನು ಕ್ರಮ ತೆಗೆದುಕೊಳ್ಳಬೇಕು ಅದು ನಡೆಯುತ್ತದೆ. ಅಂತಿಮವಾಗಿ ಸತ್ಯ ಹೊರಗಡೆ ಬಂದಿದೆ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ ಎಂದರು.
ರೈತರ ವಿಚಾರಗಳನ್ನು ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ ಎನ್ನುವ ವಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ಇದೆಲ್ಲವೂ ರಾಜಕೀಯ ಆರೋಪಗಳು. ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಿದೆ. ಕಬ್ಬು ಹಾಗೂ ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ವಿಫಲವಾಗಿದೆ” ಎಂದು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ
“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ತಿಳಿಸಿದರು.
ಕೆಎಸ್ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಳಿಕ ಮಾಹಿತಿ ನೀಡಿದ ಅವರು, ನಮಗೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸಬೇಕು ಎನ್ನುವ ಯಾವುದೇ ಉದ್ದೇಶವಿಲ್ಲ. ಆದರೆ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ, ಹಂತವಾಗಿ ಪಾಲನೆ ಮಾಡುವುದು ನಮ್ಮ ಆಲೋಚನೆ. ಇದನ್ನು ವೆಂಕಟೇಶ್ ಪ್ರಸಾದ್ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು.
“ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ” ಎಂದು ಹೇಳಿದರು.
“ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ತಿಳಿಸಿದ್ದೇನೆ. ನೂತನ ಸ್ಟೇಡಿಯಂಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಬಗ್ಗೆಯೂ ಚರ್ಚೆ ನಡೆಸಲಾಗುವುದು” ಎಂದರು.
“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದೆ ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್ ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮುಖ್ಯಮಂತ್ರಿಯವರು ಹಾಗೂ ನನ್ನನ್ನು ಭೇಟಿ ಮಾಡಿ ಸರ್ಕಾರದ ಸಹಕಾರ ಕೋರಿದ್ದಾರೆ” ಎಂದು ತಿಳಿಸಿದರು.
“ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅವರ ಬೆಂಬಲ ಹೊಂದಿರುವ ಹಾಗೂ ನೂತನ ಜವಾಬ್ದಾರಿ ಹೊತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ. ಇವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದೇನೆ” ಎಂದರು.


