ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಮಲೆನಾಡು ಮತ್ತು ಕರಾವಳಿಯ ಮೂರು ಜಿಲ್ಲೆಗಳಲಿ ವಿಪರೀತ ಮಳೆಯಾಗಲಿದೆ. ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ. ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ತೀವ್ತೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಗೆ ರಸ್ತೆಗಳು ನೀರಿನಿಂದ ತುಂಬಿಕೊಂಡಿವೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಗೆ ಮರಗಳು ನೆಲಕ್ಕುರುಳಿವೆ. ಜನರು ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಕಲೇಶಪುರ ತಾಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ, ಮರಗಳು ಕುಸಿದಿವೆ. ಗುಡ್ಡ ಕುಸಿತದಿಂದ ಕಡಗರವಳ್ಳಿ, ಬಾಚೀಹಳ್ಳಿ, ವಳಲಹಳ್ಳಿ, ಹೊಂಗಡಹಳ್ಳ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಅವಾಂತರ ಮುಂದುವರಿದಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮರಗಳು, ವಿದ್ಯುತ್ ಕಂಬಗಳು ಉರುಳಿವೆ.
ದಾವಣಗೆರೆ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದ, ಇಂದು ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಧಾರಾಕಾರ ಮಳೆಗೆ ಬೀದರ್ನಲ್ಲಿ ಬಾರಿ ಅವಾಂತರಗಳು ಸೃಷ್ಟಿಯಾಗಿದೆ. ಸಾವಿರಾರು ಎಕರೆಯಲ್ಲಿ ಬೆಳೆದ ಬೆಳೆಗಳು ನಶವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕಬಂದ್ ಆಗಿದೆ. ಬುಧೇರಾ ಗ್ರಾಮದ ಸುತ್ತಮುತ್ತ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಕಬ್ಬು, ಉದ್ದು ಹಾಗೂ ತೊಗರಿ ಸೇರಿದಂತೆ ಬೆಳೆಗಳು ಸಂಪೂರ್ಣವಾಗಿ ನೀರು ಪಾಲಾಗಿದೆ. ಕಾಜಾನಗರ, ಚಟ್ನಳಿ, ಸಾತೋಳಿ, ಭರಿದಾಬಾದಿ, ಕಾಡವಾದಿ ಹಳ್ಳಿಗಳ ರಸ್ತೆ ಸಂಪರ್ಕಮುಚ್ಚಿ ಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬೆಣ್ಣೆತೋರಾ ಜಲಾಶಯ ಭರ್ತಿಯಾಗಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನಲೆ ನದಿ ದಡದ ಜಮೀನುಗಳ ಬೆಳೆಗಳು ನೀರು ಪಾಲಾಗಿದೆ. ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೆಸರು ಬೆಳೆ ನೆಲಕಚ್ಚಿದೆ. ಎಳ್ಳು ನೀರಿನ ರಭಸಕ್ಕೆ ಕಿತ್ತು ಹೋಗಿದೆ, ತೊಗರಿಯ ಬುಡದಲ್ಲಿ ನೀರು ನಿಂತು ನೆಟ್ಟೆ ರೋಗಕ್ಕೆ ತುತ್ತಾಗಿವೆ.