Menu

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.  ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ, ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಮುಖ್ಯವಾಗಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾವಿರಾರು ನಾಗರಿಕರು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಇದೇ ರಸ್ತೆಯ ಮೂಲಕ ಸಂಚರಿಸಬೇಕಾಗಿದೆ. ಒಂದು ವೇಳೆ ಈ ಸಂಪರ್ಕ ಕಡಿತಗೊಂಡರೆ ನಾಲ್ಕೂ ಜಿಲ್ಲೆಗಳ ರೋಗಿಗಳಿಗೆ ಭಾರಿ ಸಮಸ್ಯೆಯಾಗುವುದನ್ನು ಮನಗಂಡು ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ರಸ್ತೆ ಅಥವಾ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಚಲಿಸುವುದು. ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು, ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮಾರ್ಗ ಅಥವಾ ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ರಸ್ತೆಯ ಮೂಲಕ ಸಂಚರಿಸಲು ಆದೇಶಿಸಲಾಗಿದೆ.

Related Posts

Leave a Reply

Your email address will not be published. Required fields are marked *