ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ.
ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಗದಗ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು, ಹುಲಿಗೆಮ್ಮ ದೇವಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಘಟನೆಯಲ್ಲಿ ನಾಲ್ವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದಿದೆ. ಅಪಘಾತದ ವೇಳೆ ಭಕ್ತರು ದೇವಾಲಯಕ್ಕೆ ನಡಿಗೆಯಲ್ಲಿ ತಲುಪಲು ಮೂರು ಗಂಟೆಗಳ ನಡಿಗೆ ಬಾಕಿ ಇತ್ತು. ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.
ಕುಕನೂರು ತಾಲೂಕಿನ ಭಾನಾಪುರ ಗ್ರಾಮದ ಬಳಿ ಬೈಕ್ ಡಿಕ್ಕಿ ಹೊಡೆದು ಹುಲಿಗೆಮ್ಮ ದೇವಿಯ ಭಕ್ತರೊಬ್ಬರು ಮೃತಪಟ್ಟಿದ್ದಾರೆ. ವೀರೇಶ್ ಹಳ್ಳಿಕೇರಿ (28) ಮೃತಪಟ್ಟವರು. ಇವರು ಹುಲಿಗೆಮ್ಮ ದೇಗುಲಕ್ಕೆ ಪಾದಯಾತ್ರೆ ಮಾಡುತ್ತಿದ್ದಾಗ ಈ ಅಪಘಾತ ನಡೆದಿದೆ.
ಒಂಬತ್ತು ಭಕ್ತರು ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಭಾನಾಪುರ ಬಳಿ ಬಂದಾಗ ಪಾದಯಾತ್ರಿಗಳಿಗೆ ಬೈಕ್ ಡಿಕ್ಕಿ ಹೊಡೆದು ವೀರೇಶ್ ಹಳ್ಳಿಕೇರಿ ಮೃತಪಟ್ಟು, ರಮೇಶ್ ಗಾಯಗೊಂಡಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.