“ನಮ್ಮ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಇದೇ ತಿಂಗಳು 13 ಹಾಗೂ 14ರಂದು ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ಎರಡು ದಿನಗಳ ಸಮ್ಮೇಳನ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಭಾರತದಲ್ಲಿ 6,628 ಅಣೆಕಟ್ಟುಗಳಿದ್ದು, ಕರ್ನಾಟಕ 231 ಅಣೆಕಟ್ಟುಗಳನ್ನು ಹೊಂದಿದೆ. ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಒಂದೂವರೆ ವರ್ಷಗಳ ಹಿಂದೆ ಜೈಪುರದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿತ್ತು. ಜಲಶಕ್ತಿ ಸಚಿವಾಲಯ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಈ ಸಮ್ಮೇಳನ ಆಯೋಜಿಸುತ್ತಿದೆ. ಇದಕ್ಕೆ ಕೇಂದ್ರ ಜಲಶಕ್ತಿ ಆಯೋಗವು ಅನೇಕ ಸಲಹೆ ಮಾರ್ಗದರ್ಶನ ನೀಡಿದೆ” ಎಂದು ಮಾಹಿತಿ ನೀಡಿದರು.
“ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ 46 ಸಂಶೋಧನಾ ವರದಿಗಳನ್ನು ಮಂಡಿಸಲು ಈ ಸಮ್ಮೇಳನದಲ್ಲಿ ನಾವು ಅನುಮತಿ ನೀಡಿದ್ದೇವೆ. ಕೇಂದ್ರ ಸಚಿವರಾದ ವಿ. ಸೋಮಣ್ಣ, ರಾಜ್ ಭೂಷಣ್ ಚೌಧರಿ, ರಾಜ್ಯ ಸಚಿವ ಬೋಸರಾಜು ಅವರು ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ. 10 ದೇಶಗಳ 25 ಅಂತರರಾಷ್ಟ್ರೀಯ ತಜ್ಞರು ಸೇರಿದಂತೆ 400ಕ್ಕೂ ಹೆಚ್ಚು ಜನ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ತಾಂತ್ರಿಕ ವಿಚಾರ ಸಂಕಿರಣ, ವಸ್ತುಪ್ರದರ್ಶನ ನಡೆಯಲಿವೆ. ಕರ್ನಾಟಕದ ಹಿತಾಸಕ್ತಿ ಕಾಪಾಡಲು ನಾವು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ. ಅಣೆಕಟ್ಟುಗಳು ನೀರಾವರಿ, ಇಂಧನ ಉತ್ಪಾದನೆ, ಪ್ರವಾಹ ನಿಯಂತ್ರಣ, ನೀರು ಸರಬರಾಜು ಹಾಗೂ ಮಣ್ಣಿನ ಸಂರಕ್ಷಣೆಯ ಆಧಾರವಾಗಿವೆ. ಸುದೀರ್ಘ ಕಾಲದ ಯೋಜನೆ ಗಮನದಲ್ಲಿಟ್ಟುಕೊಂಡು ಈ ಸಮ್ಮೇಳನ ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.
“ನಮ್ಮಲ್ಲಿರುವ 75% ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿದ್ದು, ನಾವು ಅಣೆಕಟ್ಟಿನ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕಿದೆ. ಈಗಾಗಲೇ 19 ರಾಜ್ಯಗಳಲ್ಲಿ 733 ಅಣೆಕಟ್ಟುಗಳ ಸುರಕ್ಷತೆಗೆ 10,211 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರ ವಿಶ್ವಬ್ಯಾಂಕ್ ಹಾಗೂ ಎಐಐಬಿಯ ಬಾಹ್ಯ ಬೆಂಬಲದೊಂದಿಗೆ ಅಣೆಕಟ್ಟು ಪುನರ್ವಸತಿ ಮತ್ತು ಸುಧಾರಣಾ ಯೋಜನೆ (DRIP) ಎರಡನೇ ಹಂತವನ್ನು ಅನುಷ್ಠಾನಗೊಳಿಸುತ್ತಿದೆ. ಕರ್ನಾಟಕದಲ್ಲಿ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ. ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಅದೇ ರೀತಿ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಸಮೀಕ್ಷೆ ನಡೆಸಿದ್ದು, ಆದ್ಯತೆ ಮೇರೆಗೆ ದುರಸ್ತಿ ಕಾಮಗಾರಿ ಕೈಗೊಂಡಿದ್ದೇವೆ” ಎಂದು ವಿವರಿಸಿದರು.
ಡಬಲ್ ಡೆಕ್ಕರ್ ಯೋಜನೆಗೆ ನಿರಾಕರಣೆ; ಕೇಂದ್ರ ಸಚಿವರ ಜತೆ ಚರ್ಚೆ
ಡಬಲ್ ಡೆಕ್ಕರ್ ಸೇರಿದಂತೆ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂಬ ಪಿ.ಸಿ ಮೋಹನ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ತಿಳಿದಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ ನಿರ್ಮಾಣವಾಗಿರುವ ಡಬಲ್ ಡೆಕ್ಕರ್ ಮೆಲ್ಸೇತುವೆಯನ್ನು ಸ್ವತಃ ಪ್ರಧಾನಮಂತ್ರಿಗಳು ನೋಡಿದ್ದಾರೆ. ಈ ಯೋಜನೆ ವೆಚ್ಚವನ್ನು ಮೆಟ್ರೋ ಸಂಸ್ಥೆ 50% ಅನುದಾನ ಹಾಕಿದರೆ, ಕರ್ನಾಟಕ ಸರ್ಕಾರ (ಜಿಬಿಎ) 50% ಅನುದಾನ ಭರಿಸಲಿದೆ. ರಸ್ತೆ ಅಗಲೀಕರಣ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರವೇ ಈ ಯೋಜನೆ ಮಾಡಬೇಕು ಎಂದು ಹೇಳಿದ್ದು, ಅದನ್ನು ಮುಂದುವರಿಸುತ್ತಿದ್ದೇವೆ. ಕೇಂದ್ರ ಸರ್ಕಾರದವರು ತಾಂತ್ರಿಕ ವಿಚಾರವದಲ್ಲಿ ಮರುಪರಿಶೀಲನೆಗೆ ಸಲಹೆ ನೀಡಿರಬಹುದು” ಎಂದು ತಿಳಿಸಿದರು.
ಡಬಲ್ ಡೆಕ್ಕರ್ ಮಾಡಿದರೆ ಮೆಟ್ರೋ ರೈಲಿಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಾರೆ ಎಂಬ ಕಾರಣ ಕೊಟ್ಟಿದ್ದಾರೆ ಎಂದು ಕೇಳಿದಾಗ, “ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರೇ ಬೇರೆ, ಮೆಟ್ರೋ ಬಳಸುವ ಪ್ರಯಾಣಿಕರೇ ಬೇರೆ. ಈ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.


