ಸಿಂಧನೂರು ನಗರದ ಪೊಲೀಸ್ ಠಾಣೆ ಎದುರಿಗೆ ಇರುವ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಮತ್ತೆ ಊಟದಲ್ಲಿ ಏರುಪೇರು ಆಗಿರುವುದರಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಬೆಳಗಿನ ತಿಂಡಿ ತಿಂದ ಬಳಿಕ 25 ಮಕ್ಕಳು ಅಸ್ವಸ್ಥಗೊಂಡು ನಗರದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಕ್ಕಳು ವಾಂತಿ ಭೇದಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಐವರು ಮಕ್ಕಳಿಗೆ ಆಹಾರದ ಸಮಸ್ಯೆ ಆಗಿರುವುದು ಕಂಡು ಬಂದಿದೆ, ವಸತಿ ನಿಲಯದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಘಟನೆ ನೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಆಸ್ಪತ್ರೆಗೆ ಶಾಸಕ ಹಂಪನಗೌಡ ಬಾದಲ್ಲಿ ಭೇಟಿ ನೀಡಿ ಪರಿಶೀಲಿಸಿದರು, ಬಳಿಕ ಮಾತನಾಡಿ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂತಹ ಘಟನೆಗಳು ಜರುಗುತ್ತಿದೆ, ದಿನನಿತ್ಯ ವಿದ್ಯಾರ್ಥಿಗಳಿಗೆ ಕೊಡುವ ಆಹಾರವನ್ನು ಸ್ವಚ್ಛವಾಗಿ ಇಡಬೇಕು ಸಮಯಕ್ಕೆ ಸರಿಯಾಗಿ ಊಟದ ವ್ಯವಸ್ಥೆ ಹಾಸ್ಟೆಲ್ ಗಳಲ್ಲಿ ಆಗಬೇಕು, ಊಟದ ಕೊಠಡಿ ಸ್ವಚ್ಛವಾಗಿ ಇಡುವ ಕೆಲಸ ಆಗಬೇಕು, ಶುದ್ಧವಾದ ಕುಡಿಯುವ ನೀರು ಒದಗಿಸಬೇಕು ಮತ್ತು ಯಾವುದೇ ರೀತಿಯಲ್ಲಿ ಮಕ್ಕಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಆಗಸ್ಟ್ ೪ರಂದು ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು, ತಲೆ ಸುತ್ತ ಕಾಣಿಸಿಕೊಂಡಿದೆ. ನಂತರ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು. ಇದಕ್ಕೂ ಮೊದಲು ಹೀಗೆ ಆಹಾರ ತಿಂದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಶಾಸಕ ಹಂಪನಗೌಡ ಬಾದರ್ಲಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದಾಗಿ ಎರಡನೇ ಬಾರಿಗೆ ಸಮಸ್ಯೆ ಮರುಕಳಿಸಿದೆ.


