ಜಾರ್ಖಂಡ್ನಲ್ಲಿ ನಡೆದ ನಾನಾ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಜಾರ್ಖಂಡ್ನ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಬೆಳಿಗ್ಗೆ ಪ್ರತಿಭಟನಾಕಾರರು ವಿಧಾನಸೌಧದೆಡೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ.
ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ 51 ನೇ ಹುಟ್ಟುಹಬ್ಬದ ದಿನವಾದ ಗುರುವಾರ ಪ್ರತಿಭಟನೆ ತೀವ್ರಗೊಂಡಿದೆ, ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ವಿಧಿಸಲಾಗಿದೆ. 4 ಕಿ.ಮೀ ಪ್ರದೇಶದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರು ಮಾತ್ರ ರ್ಯಾಲಿಯನ್ನು ಮುಂದುವರಿಸಿದ್ದಾರೆ.
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ, ಹೀಗಾಗಿ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಈ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ವಿದ್ಯಾರ್ಥಿಗಳ ಸುದೀರ್ಘ ಪ್ರತಿಭಟನೆಯ ಬಳಿಕ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ನ ಪ್ರಾಥಮಿಕ ಪರೀಕ್ಷೆಯನ್ನ ರದ್ದುಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಬ್ಯಾಕ್ಲಾಗ್ ಪ್ರಶ್ನೆಪತ್ರಿಕೆಗಳ ಕುರಿತು ಸಿಐಡಿ ಮತ್ತು ಇಡಿ ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಿದೆ ಎನ್ನಲಾಗಿದೆ. ಸಿಬಿಐ ತನಿಖೆ ನಡೆಸಬೇಕು ಎಂಬ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯ ವಿಚಾರದಲ್ಲಿ ಇನ್ನೂ ಸಮ್ಮತಿಸಿಲ್ಲ.


