ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಸ್ವಾಗತಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ನ್ಯಾಯಕ್ಕೆ ಸಿಕ್ಕ ಜಯವಾಗಿದೆ. ಈ ಪ್ರಕರಣದಲ್ಲಿ ನನ್ನದಾಗಲೀ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೇಡಂ ಅವರ ಪಾತ್ರವಾಗಲೀ ಇಲ್ಲ ಎಂದು ಆರಂಭದಿಂದಲೂ ಹೇಳುತ್ತಾ ಬಂದಿದ್ದೆ. ಆದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕ್ಷುಲ್ಲಕ ಆರೋಪಗಳನ್ನು ಮಾಡಿ ನಮ್ಮ ಮೇಲೆ ಗೂಬೆ ಕೂರಿಸುವಂತಹ ಪ್ರಯತ್ನ ಮಾಡಿದ್ದರು. ಆದರೆ, ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ನ್ನೊಳಗೊಂಡ ದ್ವಿಸದಸ್ಯ ಪೀಠವು ನ್ಯಾಯಪರವಾದ ತೀರ್ಪನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಪ್ರತಿಪಕ್ಷಗಳು ಎಷ್ಟೇ ಟೀಕೆಗಳು, ಆರೋಪಗಳನ್ನು ಮಾಡಿದರೂ, ದೇಶದ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು ನಾವು. ಆ ನಂಬಿಕೆಯೇ ಈಗ ನ್ಯಾಯಪರವಾದ ತೀರ್ಪು ಬರುವಂತೆ ಮಾಡಿದೆ.
ದುರುದ್ದೇಶಪೂರಿತವಾಗಿ ಜಾರಿ ನಿರ್ದೇಶನಾಲಯವನ್ನು ಈ ಪ್ರಕರಣದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಇದೇ ಕಾರಣದಿಂದ ನಮ್ಮದೇನೂ ತಪ್ಪಿಲ್ಲ ಎಂಬುದನ್ನು ಅರಿತಿದ್ದ ಕರ್ನಾಟಕ ಹೈಕೋರ್ಟ್ ಈ ಹಿಂದೆ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವ ಮೂಲಕ ಸುಪ್ರೀಂಕೋರ್ಟ್ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಪರಾಕಿ ಹಾಕಿದೆ ಎಂದು ಸುರೇಶ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ವಿಪಕ್ಷಗಳಿಗೆ ತಕ್ಕ ಪಾಠ
ಸುಳ್ಳು ಆರೋಪಗಳನ್ನು ಮಾಡಿ ಕಪಟ ನಾಟಕದ ಪಾದಯಾತ್ರೆ ಮಾಡಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸುಪ್ರೀಂಕೋರ್ಟಿನ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ. ಅವರ ಕ್ಷುಲ್ಲಕ ಆರೋಪಗಳಿಗೆ ತಕ್ಕ ಶಾಸ್ತಿಯಾಗಿದೆ. ಈಗಲಾದರೂ ಪ್ರತಿಪಕ್ಷಗಳು ಕ್ಷುಲ್ಲಕ ಆರೋಪಗಳನ್ನು ಮಾಡುವುದನ್ನು ಬಿಟ್ಟು ಜನರ ಬಳಿಗೆ ಹೋಗಿ ಅವರ ಕಷ್ಟ ಕಾರ್ಪಣ್ಯಗಳನ್ನು ಆಲಿಸಲಿ ಎಂದು ಸವಾಲೆಸೆದರು.
ಸುಪ್ರೀಂ ಎಚ್ಚರಿಕೆ ಬಗ್ಗೆ ಎಚ್ಚರವಿರಲಿ
ಇನ್ನು ಸುಪ್ರೀಂಕೋರ್ಟ್ ಇಡಿಯಂತಹ ಸಂಸ್ಥೆಗಳನ್ನು ರಾಜಕೀಯ ದಾಳವನ್ನಾಗಿ ಬಳಸಬಾರದು. ಹೀಗೆ ರಾಜಕೀಯ ಮಾಡುವುದನ್ನು ಮುಂದುವರಿಸಿದರೆ ಕಠಿಣ ಶಬ್ಧಗಳಲ್ಲಿ ಆದೇಶ ನೀಡಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ನೇರ ಎಚ್ಚರಿಕೆ ನೀಡಿರುವುದನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎಚ್ಚರಿಕೆ ವಹಿಸಲಿ.
ವಿಪಕ್ಷಗಳ ಮೈಗೆಲ್ಲಾ ಮಸಿ!
ದೇಶ ಕಂಡ ನಿಷ್ಠಾವಂತ ರಾಜಕಾರಣಿ ಸಿದ್ದರಾಮಯ್ಯ. ಅವರ ವೈಯಕ್ತಿಕ ತೇಜೋವಧೆ ಮಾಡಲು ಷಡ್ಯಂತ್ರ ರೂಪಿಸಿದ್ದರು. ಈ ಮೂಲಕ ಮುಖ್ಯಮಂತ್ರಿಗಳ ಮುಖಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದರು. ಆದರೆ, ಇಂದು ಸುಪ್ರೀಂಕೋರ್ಟ್ ನ್ಯಾಯಪರವಾದ ತೀರ್ಪು ನೀಡುವ ಮೂಲಕ ಪ್ರತಿಪಕ್ಷಗಳ ಮೈಯೆಲ್ಲಾ ಮಸಿಯಾಗುವಂತೆ ಆಗಿದೆ.
ಸಿದ್ದರಾಮಯ್ಯ, ಪಾರ್ವತಿ ಮೇಡಂ ಮತ್ತು ನನಗೆ ಕೆಟ್ಟ ಹೆಸರು ತರಲು ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. ಅವರಿಗೆ ಆ ದೇವರೇ ಬುದ್ಧಿ ಕಲಿಸುವ ಕೆಲಸ ಮಾಡುತ್ತಾರೆ ಎಂದೂ ಬೈರತಿ ಸುರೇಶ ಹೇಳಿದರು.
ಅವರೇ ರಾಜೀನಾಮೆ ನೀಡಲಿ
ಸುಳ್ಳು ಆರೋಪಗಳನ್ನು ಮಾಡಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು, ಪೊಳ್ಳು ಪಾದಯಾತ್ರೆ ನಡೆಸಿ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡಿರುವ ಪ್ರತಿಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಸಚಿವರು ಆಗ್ರಹಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದ್ದರು.