ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ.
ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ತಿಳಿಸಿದ್ದಾರೆ.